ADVERTISEMENT

ಬೆಂಗಳೂರು | ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2023, 14:04 IST
Last Updated 31 ಅಕ್ಟೋಬರ್ 2023, 14:04 IST
ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟಿಸಿದರು –ಪ್ರಜಾವಾಣಿ ಚಿತ್ರ
ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟಿಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಶಿಫಾರಸುಗಳ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಒಳಮೀಸಲಾತಿಗೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಅದಕ್ಕೆ ನುರಿತ ಕಾನೂನು ತಜ್ಞರ ತಂಡವನ್ನು ರಚಿಸಿ ಸಾಮಾಜಿಕ, ಸಂವಿಧಾನಿಕ ಹಕ್ಕುಗಳ ರಕ್ಷಣೆ ಒತ್ತು ನೀಡಬೇಕು. ಪರಿಶಿಷ್ಟ ಜಾತಿಗಳ ನಿಗಮಗಳಿಗೆ ಹೆಚ್ಚಿನ ಅನುದಾನ ಒದಗಿಸಿ, ಜನಾಂಗ, ಪ್ರಾದೇಶಿಕವಾರು ಪ್ರಾತಿನಿಧ್ಯವನ್ನು ಖಾತರಿಪಡಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. 

‘ರಾಜ್ಯದಲ್ಲಿ 10 ಲಕ್ಷ ಜನಸಂಖ್ಯೆ ಇರುವ ಸಮಗಾರ ಹರಳಯ್ಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕು. ರಾಯಚೂರು ಜಿಲ್ಲೆಯ ದಲಿತ ಮುಖಂಡ ಪ್ರಸಾದ್ ಮದ್ಲಾಪುರ ಹತ್ಯೆಗೆ ಕಾರಣರಾದ ಆರೋಪಿಗಳನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸ್ಥಳಕ್ಕೆ ಸಚಿವರ ಭೇಟಿ

ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ‘ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹಂಚಿಕೆ ಸಂಪುಟದ ಅನುಮೋದನೆ ಪಡೆದು ಕೇಂದ್ರದಲ್ಲಿ ಚರ್ಚೆಯಾದರೆ ಮಾತ್ರ ಒಳಮೀಸಲಾತಿ ಲಭಿಸುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಭರವಸೆ ನೀಡಿದರು.

‘ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.