ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕಾರ್ಮಿಕರ ವಿರೋಧಿಯಾಗಿರುವ ನಾಲ್ಕು ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಜುಲೈ 9ರಂದು ರಾಜ್ಯದಾದ್ಯಂತ ಸಾರ್ವತ್ರಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ತಿಳಿಸಿದೆ.
ಬುಧುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಸಂಚಾಲಕ ಕೆ.ವಿ.ಭಟ್, ‘ಕೆಲಸದ ಅವಧಿ ಎಂಟು ಗಂಟೆ ನಿಗದಿಪಡಿಸಬೇಕು. ಎಲ್ಲ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೆ ತಿಂಗಳಿಗೆ 36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ, ಹೊರಗುತ್ತಿಗೆ, ನಿಗದಿತ ಅವಧಿಯ ಉದ್ಯೋಗ, ಅಪ್ರೆಂಟಿಸ್, ಟ್ರೈನಿ, ನ್ಯಾಪ್ಸ್ ಮುಂತಾದ ಹೆಸರಿನಲ್ಲಿ ಕಾರ್ಮಿಕರ ನೇಮಕಾತಿ ಸ್ಥಗಿತಗೊಳಿಸಬೇಕು. ಗುತ್ತಿಗೆ ಸೇರಿದಂತೆ ಇತರೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು’ ಎಂದು ಆಗ್ರಹಿಸಿದರು.
‘ಸಾರ್ವಜನಿಕ ಉದ್ದಿಮೆ, ನಿಗಮ ಮತ್ತು ಇಲಾಖೆಗಳನ್ನು ಖಾಸಗೀಕರಣಗೊಳಿಸುವ ‘ರಾಷ್ಟ್ರೀಯ ನಗದೀಕರಣ ಯೋಜನೆ’ಯನ್ನು ರದ್ದುಪಡಿಸಬೇಕು. ಆದಿವಾಸಿಗಳು, ರೈತರು, ಸ್ಥಳೀಯ ಸಮುದಾಯದ ಉನ್ನತಿಗೆ ಗಣಿಗಾರಿಕೆ ಲಾಭದ ಶೇಕಡ 50ರಷ್ಟು ಪಾಲು ಬಳಕೆ ಖಾತ್ರಿಗೊಳಿಸುವ ಖನಿಜ ಮತ್ತು ಲೋಹಗಳ ಗಣಿಗಾರಿಕೆಯ ಕಾನೂನಿಗೆ ತಿದ್ದುಪಡಿ ಮಾಡಬೇಕು. ವಿದ್ಯುತ್ ತಿದ್ದುಪಡಿ ಮಸೂದೆ–2022 ವಾಪಸ್ ಪಡೆಯಬೇಕು. ವಿದ್ಯುತ್ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು.
‘ದಿನದ ಕೆಲಸದ ಅವಧಿಯನ್ನು 12 ಗಂಟೆಗೆ ವಿಸ್ತರಣೆ ಹಾಗೂ ಮಹಿಳಾ ಕಾರ್ಮಿಕರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಕಾಯ್ದೆ ರದ್ದುಗೊಳಿಸಬೇಕು’ ಎಂದರು.
‘ಜುಲೈ 9ರಂದು ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಯಲಿದ್ದು, ಅಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.
ಕಾರ್ಮಿಕ ಮುಖಂಡರಾದ ಅಪ್ಪಣ್ಣ, ವಿಜಯ್ ಭಾಸ್ಕರ್, ಜಿ.ಆರ್. ಶಿವಶಂಕರ್ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.