ADVERTISEMENT

ಜಾತಿ ಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ 18ಕ್ಕೆ ಸಭೆ: ಎಚ್‌.ಎಂ.ರೇವಣ್ಣ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 5:18 IST
Last Updated 17 ಅಕ್ಟೋಬರ್ 2020, 5:18 IST
   

ಬೆಂಗಳೂರು: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಕುರಿತು ಚರ್ಚಿಸಲು ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಇದೇ 18ರಂದು ಸಮಾಲೋಚನಾ ಸಭೆ ಆಯೋಜಿಸಲಾಗಿದೆ’ ಎಂದು ಒಕ್ಕೂಟದ ಪ್ರಮುಖರಾದ ಎಚ್‌.ಎಂ. ರೇವಣ್ಣ ಹೇಳಿದರು.

ಒಕ್ಕೂಟದ ಮುಖಂಡರ ಜೊತೆ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹಿಂದುಳಿದ ಜಾತಿ ಸಮುದಾಯಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ನಾಯಕರು, ಎಲ್ಲ ಪಕ್ಷಗಳ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದರು.

‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ₹ 162 ಕೋಟಿ ವೆಚ್ಚ ಮಾಡಿ ಈ ಗಣತಿ ಮಾಡಲಾಗಿದೆ. ಇಲ್ಲಿಯವರೆಗೆ ಯಾವ ರಾಜ್ಯದಲ್ಲೂ ಈ ರೀತಿಯ ಗಣತಿ ನಡೆದಿಲ್ಲ. ಸಿದ್ದರಾಮಯ್ಯ ಅವಧಿಯ ಕೊನೆಯಲ್ಲಿ ವರದಿ ಅಂತಿಮ ಹಂತದಲ್ಲಿತ್ತು. ಹೀಗಾಗಿ, ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿರಲಿಲ್ಲ. ಇದೀಗ ವರದಿ ಸಿದ್ಧವಾಗಿದ್ದು, ಸರ್ಕಾರ ಅದನ್ನು ಸ್ವೀಕರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಈ ವಿಷಯದಲ್ಲಿ ನಾವು ರಾಜಕೀಯ ತರುವುದಿಲ್ಲ. ವರದಿಯನ್ನು ಸರ್ಕಾರ ಅಂಗೀಕರಿಸಬೇಕು. 18ರಂದು ನಡೆಯುವ ಸಭೆಯಲ್ಲಿ ವರದಿ ಬಿಡುಗಡೆಗೆ ಒತ್ತಾಯಿಸಿ ತೆಗೆದುಕೊಳ್ಳಬೇಕಾದ ಮುಂದಿನ ನಿಲುವಿನ ಬಗ್ಗೆ ಚರ್ಚೆ ನಡೆಯಲಿದೆ’ ಎಂದರು.

ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ, ಕಾರ್ಯಾಧ್ಯಕ್ಷ ಸುರೇಶ್ ಲಾತೂರ್, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ವೆಂಕಟರಾಮಯ್ಯ ಸುದ್ದಿಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.