ಬೆಂಗಳೂರು: ಸವಿತಾ ಸಮುದಾಯದವರನ್ನು ಪರಿಶಿಷ್ಟ ಪಂಗಡ ಅಥವಾ ಪ್ರವರ್ಗ–1ಕ್ಕೆ ಸೇರಿಸಬೇಕು ಎಂದು ಅಖಿಲ ಕರ್ನಾಟಕ ಕನ್ನಡ ಸೇವಾ ಮಹಾಮಂಡಲ ಆಗ್ರಹಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಮಂಡಲದ ಅಧ್ಯಕ್ಷ ಟಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಪಿ. ರಮೇಶ, ‘ಸವಿತಾ ಸಮುದಾಯ ಸದ್ಯ ಪ್ರವರ್ಗ–2ರಲ್ಲಿ ಇದೆ. ಇದನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಮೂಲಕ ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಸೌಲಭ್ಯ ಒದಗಿಸಬೇಕು’ ಎಂದು ಒತ್ತಾಯಿಸಿದರು.
‘ಅಸಂಘಟಿತ ಕ್ಷೌರಿಕ ಸಮುದಾಯದಲ್ಲಿನ 50 ವರ್ಷ ಮೇಲ್ಪಟ್ಟ ಮಂಗಳವಾದ್ಯ ಕಲಾವಿದರಿಗೆ ಮಾಸಾಶನ, ಆರೋಗ್ಯ ವಿಮೆ, ನಿವೇಶನ ನೀಡಬೇಕು. ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಮುದಾಯ ಭವನ ನಿರ್ಮಿಸಲು ಅನುದಾನ ನೀಡಬೇಕು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸವಿತಾ ಸಮುದಾಯದ ಮಹಿಳೆಯರು ಹಾಗೂ ಪುರುಷರಿಗೆ ಕೇಶ ವಿನ್ಯಾಸ ತರಬೇತಿ ನೀಡಬೇಕು. ‘ಕ್ಷೌರಿಕ ವೃತ್ತಿ ಮಾಡುವವರಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.