ADVERTISEMENT

ಬೆಂಗಳೂರು | ಭೂಸ್ವಾಧೀನ ಜಟಾಪಟಿ: ಸಿಎಂ ನೇತೃತ್ವದಲ್ಲಿ ಸಭೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 15:46 IST
Last Updated 24 ಜನವರಿ 2024, 15:46 IST
   

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಎರಡನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಕೃಷಿ ಜಮೀನುಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಚಿವರಾದ ಎಂ.ಬಿ. ಪಾಟೀಲ ಮತ್ತು ಕೆ.ಎಚ್. ಮುನಿಯಪ್ಪ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯು ರೈತರ ಎರಡು ಗುಂಪುಗಳ ಜಟಾಪಟಿಯ ಕಾರಣದಿಂದ ಯಾವುದೇ ತೀರ್ಮಾನಕ್ಕೆ ಬರಲಾಗಲಿಲ್ಲ.

ರೈತರ ಒಂದು ಗುಂಪು ಕೃಷಿ ಜಮೀನು ಸ್ವಾಧೀನವನ್ನು ತೀವ್ರವಾಗಿ ವಿರೋಧಿಸಿತು. ಮತ್ತೊಂದು ಗುಂಪು ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಪರಿಹಾರ ಪಾವತಿಸುವಂತೆ ಆಗ್ರಹಿಸಿತು. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಯಿತು. ಎರಡೂ ಗುಂಪುಗಳ ಅಹವಾಲು ಆಲಿಸಿದ ಸಚಿವದ್ವಯರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಪ್ರಕಟಿಸಿದರು.

ದೇವನಹಳ್ಳಿ ತಾಲ್ಲೂಕಿನ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆಬಜೇನಹಳ್ಳಿ, ನೆಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮಟ್ಟಿಬಾರ್ಲು, ಮುದ್ದೇನಹಳ್ಳಿ, ಚನ್ನರಾಯಪಟ್ಟಣ, ಶೋತ್ರಿಯ ತೆಲ್ಲೂಹಳ್ಳಿ ಮತ್ತು ಹ್ಯಾಡಾಳ ಗ್ರಾಮಗಳಲ್ಲಿ 1,777 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆಗಸ್ಟ್ 30ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು.

ADVERTISEMENT

ಭೂಸ್ವಾಧೀನ ವಿರೋಧಿಸುತ್ತಿರುವ ರೈತರ ಗುಂಪಿನ ನೇತೃತ್ವವನ್ನು ರೈತ ಮುಖಂಡ ಜಿ.ಸಿ. ಬಯ್ಯಾರೆಡ್ಡಿ ಮತ್ತು ದಲಿತ ಸಂಘರ್ಷ ಸಮಿತಿ ಸಂಚಾಲಕ ಮಾವಳ್ಳಿ ಶಂಕರ್‌ ಹಾಗೂ ಭೂಸ್ವಾಧೀನ ಬೆಂಬಲಿಸುತ್ತಿರುವ ರೈತರ ಗುಂಪಿನ ನೇತೃತ್ವವನ್ನು ರೈತ ಮುಖಂಡ ಲಕ್ಷ್ಮಿನಾರಾಯಣ ವಹಿಸಿದ್ದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.