ADVERTISEMENT

ದೇವನಹಳ್ಳಿ ಬಳಿ ಜಮೀನು ಮಾರಾಟಕ್ಕೆ ನಿರ್ಬಂಧವಿಲ್ಲ: ಸರ್ಕಾರದ ಸ್ಪಷ್ಟನೆ

ಸೌಲಭ್ಯಗಳ ಅಧ್ಯಯನಕ್ಕೆ ಸಮಿತಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 15:28 IST
Last Updated 9 ಡಿಸೆಂಬರ್ 2025, 15:28 IST
   

ಬೆಂಗಳೂರು: ‘ದೇವನಹಳ್ಳಿ ತಾಲ್ಲೂಕಿನಲ್ಲಿ ಶಾಶ್ವತ ವಿಶೇಷ ಕೃಷಿ ವಲಯ ಎಂದು ಘೋಷಿಸಿರುವ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನು ಮಾರಾಟಕ್ಕೆ ಯಾವುದೇ ನಿರ್ಬಂಧವನ್ನು ಸರ್ಕಾರ ವಿಧಿಸಿಲ್ಲ’ ಎಂದು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ದೇವನಹಳ್ಳಿ ಸಮೀಪ ಏರೋಸ್ಪೇಸ್ ಪಾರ್ಕ್ ಸ್ಥಾಪಿಸಲು ಭೂಮಿಯ ಅಗತ್ಯ ಇತ್ತು. ಈ ಭಾಗದ ರೈತರು ಕೃಷಿ ಮುಂದುವರಿಸಿಕೊಂಡು ಹೋಗುವ ಅಪೇಕ್ಷೆ ವ್ಯಕ್ತಪಡಿಸಿದ ನಂತರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಅಧಿಸೂಚನೆ ಹಿಂದಕ್ಕೆ ಪಡೆದಿದೆ. ಕೃಷಿ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ತೀರ್ಮಾನವನ್ನೂ ಪ್ರಕಟಿಸಿದೆ. ರೈತರ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಮಾಡುವವರಿಗೆ ಕಡಿವಾಣ ಹಾಕುವುದು ಸರ್ಕಾರದ ಉದ್ದೇಶವೇ ಹೊರತು ಜಮೀನು ಮಾರಾಟ ಮಾಡುವ ರೈತರ ಹಕ್ಕನ್ನು ಕಸಿದುಕೊಂಡಿಲ್ಲ’ ಎಂದು ತಿಳಿಸಿದ್ದಾರೆ.

‘ರೈತರು ತಾವಾಗಿಯೇ ಸರ್ಕಾರಕ್ಕೆ ಜಮೀನು ಕೊಡಲು ಮುಂದೆ ಬಂದರೆ ಅದಕ್ಕೂ ಅವಕಾಶವಿದೆ. ಇಂತಹ ಜಮೀನುಗಳಿಗೆ ಭೂಮಿಯ ದರ ನಿರ್ಧಾರ ಸಮಿತಿಯ ತೀರ್ಮಾನದಂತೆ ಪರಿಹಾರ ಕೊಡಲಾಗುವುದು. ಆದರೆ, ಸರ್ಕಾರಕ್ಕೆ ಮಾತ್ರವೇ ಜಮೀನು ಮಾರಾಟ ಮಾಡಬೇಕು’ ಎಂಬ ಯಾವ ನಿರ್ಬಂಧವೂ ಇಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

‘ತಮಿಳುನಾಡು, ಛತ್ತೀಸಗಢ, ಉತ್ತರಾಖಂಡ, ಮಹಾರಾಷ್ಟ್ರ ರಾಜ್ಯಗಳಲ್ಲಿ ವಿಶೇಷ ಕೃಷಿ ವಲಯಗಳಿವೆ. ಹಾಗೆಯೇ ವಿದೇಶಗಳಲ್ಲಿಯೂ ರೂಪುಗೊಂಡಿವೆ. ಅಂತಹ ಕಡೆ ರೈತರಿಗೆ ಏನೇನು ಸೌಲಭ್ಯ ಒದಗಿಸಲಾಗುತ್ತಿದೆ ಎನ್ನುವುದನ್ನು ಅಧ್ಯಯನ ಮಾಡಲು ಒಂದು ಸಮಿತಿ ರಚಿಸಲಾಗುವುದು. ವರದಿ ಆಧರಿಸಿ ಅಲ್ಲಿ ಸಿಗುವ ಅನುಕೂಲಗಳನ್ನು ಇಲ್ಲೂ ಒದಗಿಸಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.