ADVERTISEMENT

ದೇವನಹಳ್ಳಿಯ 1,777 ಎಕರೆ `ಶಾಶ್ವತ ವಿಶೇಷ ಕೃಷಿ ವಲಯ: ಎಚ್.ಕೆ. ಪಾಟೀಲ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 15:41 IST
Last Updated 5 ಡಿಸೆಂಬರ್ 2025, 15:41 IST
<div class="paragraphs"><p>ಎಚ್.ಕೆ. ಪಾಟೀಲ</p></div>

ಎಚ್.ಕೆ. ಪಾಟೀಲ

   

ಬೆಂಗಳೂರು: ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯಲ್ಲಿನ 1,777 ಎಕರೆ ಭೂಮಿಯನ್ನು`ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸಲು ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತರ ಹಿತವನ್ನು ಪರಿಗಣಿಸಿ ಅವರಿಗೆ ಪೂರಕವಾಗಿ ಸ್ಪಂದಿಸಲಾಗಿದೆ. 1996ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ಕಲಂ 4ರ ಅಡಿಯಲ್ಲಿರುವ ಅಧಿಕಾರವನ್ನು ಬಳಸಿ, 1,777 ಎಕರೆಯನ್ನು ಪ್ರಾಥಮಿಕ ಅಧಿಸೂಚನೆಯಿಂದ ಹೊರಗಿಡುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

ADVERTISEMENT

‘ಇಷ್ಟು ಭೂಮಿಯನ್ನು ಶಾಶ್ವತ ವಿಶೇಷ ಕೃಷಿ ವಲಯವೆಂದು ಘೋಷಿಸಲು ಅಗತ್ಯವಿರುವ ರೂಪುರೇಷೆ ಸಿದ್ಧಪಡಿಸಲು ತಜ್ಞರ ಸಮಿತಿ ರಚಿಸಲಾಗುತ್ತದೆ. ನಗರಾಭಿವೃದ್ಧಿ ಇಲಾಖೆಯಿಂದ ಸಂಬಂಧಿತ ಸಮವರ್ತಿ ಅಧಿಸೂಚನೆ ಹೊರಡಿಸಲಾಗುವುದು. ಈ ಜಮೀನಿನ ಪಹಣಿಗಳಲ್ಲಿನ ಕಾಲಂ 11ರಲ್ಲಿ ‘ಶಾಶ್ವತ ವಿಶೇಷ ಕೃಷಿ ವಲಯ’ವೆಂದು ನಮೂದಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ವಿವರಿಸಿದರು.

‘ಒಂದು ವೇಳೆ, ಈ 13 ಗ್ರಾಮಗಳ ರೈತರೇ ಸ್ವಯಂಪ್ರೇರಿತವಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ತಮ್ಮ ಜಮೀನುಗಳನ್ನು ಬಿಟ್ಟುಕೊಡಲು ಮುಂದೆ ಬಂದಲ್ಲಿ, ಅಂತಹ ಜಮೀನುಗಳನ್ನು ಅಗತ್ಯಾನುಸಾರ ಮತ್ತು ನಿಯಮಾನುಸಾರ ಸ್ವಾಧೀನ ಪಡಿಸಿಕೊಳ್ಳಲಾಗುವುದು. ಇದಕ್ಕಾಗಿ ರೈತರಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗುವುದು. ಇಂತಹ ಪ್ರಕರಣಗಳಲ್ಲಿ ಭೂದರ ನಿರ್ಧರಣಾ ಸಮಿತಿಯ ತೀರ್ಮಾನದಂತೆ ಸೂಕ್ತ ಪರಿಹಾರವನ್ನೂ ನೀಡಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.