
ಬೆಂಗಳೂರು: ‘ಒಳ್ಳೆಯ ಕೆಲಸ ಮಾಡುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಗುರುತಿಸಿ, ಪ್ರೋತ್ಸಾಹಿಸಲಾಗುವುದು. ಆದರೆ, ಉದ್ದೇಶಪೂರ್ವಕವಾಗಿ ತಪ್ಪು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಹೇಳಿದರು.
ನಗರದಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ‘ಇಲಾಖೆಯಲ್ಲಿ ಸುಧಾರಣೆ ಆಗಬೇಕು. ಅದೇ ರೀತಿ ಕೈದಿಗಳಲ್ಲೂ ಸುಧಾರಣೆ ಆಗಬೇಕಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದೊಂದಿಗೆ ಉತ್ತಮವಾಗಿ ಕಾರ್ಯ ನಿರ್ವಹಿಸಲಾಗುವುದು. ಕೆಲವೊಮ್ಮೆ ಉದ್ದೇಶಪೂರ್ವಕವಲ್ಲದ ಸಣ್ಣ ತಪ್ಪುಗಳು ಆಗುತ್ತವೆ. ಆದರೆ, ಉದ್ದೇಶಪೂರ್ವಕವಾಗಿ ಅಕ್ರಮದಲ್ಲಿ ಭಾಗಿಯಾದರೆ ಸಹಿಸುವುದಿಲ್ಲ’ ಎಂದು ಎಚ್ಚರಿಸಿದರು.
'ಬೈಲಹೊಂಗಲ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಿಗೆ ಭೇಟಿ ನೀಡಿದ್ದೇನೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆಯೂ ಈ ಹಿಂದೆ ಸಾಕಷ್ಟು ಬಾರಿ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದೇನೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಮಸ್ಯೆಗಳನ್ನು ಅರ್ಥೈಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇಲಾಖೆಯಲ್ಲಿ ಪ್ರತಿ ಅಧಿಕಾರಿ ಮತ್ತು ಸಿಬ್ಬಂದಿ ಪಾತ್ರ ಮುಖ್ಯ. ಅಕ್ರಮಗಳ ನಿಯಂತ್ರಣ ಅವರಿಂದಲೇ ಸಾಧ್ಯ’ ಎಂದರು.
‘ಜೈಲಿನಲ್ಲಿ ಸಿಬ್ಬಂದಿ ಕೊರತೆ ಇದೆ. ಕೈದಿಗಳ ಸಂಖ್ಯೆಗೆ ತಕ್ಕಂತೆ ಸಿಬ್ಬಂದಿ ಇಲ್ಲ. ಕಲಬುರಗಿಯಲ್ಲಿದ್ದಾಗ ವಾರ್ಡನ್ ಮೇಲೆ ಕೈದಿಗಳು ಹಲ್ಲೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಕಾರಾವಾರ ಜೈಲಿನಲ್ಲಿ ವಿಚಾರಣಾ ಕೈದಿಗಳು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆಯಿಂದಾಗಿ ಸಿಗ್ನಲ್ ಸಿಗುತ್ತಿಲ್ಲವೆಂದು ಸುತ್ತಮುತ್ತಲ ಪ್ರದೇಶದ ಜನರು ಹೇಳುತ್ತಿದ್ದಾರೆ. ಜೈಲಿನ ಸುತ್ತಲಿನ ಪ್ರದೇಶ ಈಗ ಸಾಕಷ್ಟು ಅಭಿವೃದ್ಧಿಯಾಗಿದೆ. ಈ ಎಲ್ಲದರ ಬಗ್ಗೆ ಪರಿಶೀಲನೆ ನಡೆಸಿ, ಪರಿಹಾರ ಹುಡುಕಿ, ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.
ಜೈಲಿನಲ್ಲಿ ಈ ಹಿಂದೆ ನಡೆದಿರುವ ಘಟನೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಅಕ್ರಮ ಚಟುವಟಿಕೆಗಳು ನಡೆಯದಂತೆ ಅಧಿಕಾರಿಗಳ ಜತೆ ಸಮಾಲೋಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.