
ದಿನೇಶ್ ಗುಂಡೂರಾವ್
ಬೆಂಗಳೂರು: ‘ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ದಾಸ್ತಾನು ಖಚಿತಪಡಿಸಿಕೊಳ್ಳುವ ಜತೆಗೆ, ಯಾವುದೇ ಔಷಧ ಕೊರತೆಯಾಗದಂತೆ ಕ್ರಮವಹಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
‘ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧವಿಲ್ಲ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಗುರುವಾರ ವಿಶೇಷ ವರದಿ ಪ್ರಕಟವಾಗಿತ್ತು. ಔಷಧ ಕೊರತೆಗೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಗುರುವಾರ ಸಭೆ ನಡೆಸಿದ ಸಚಿವರು, ರೋಗಿಗಳಿಗೆ ಸಮಸ್ಯೆಯಾಗದಂತೆ ಅಗತ್ಯ ಔಷಧಗಳನ್ನು ಖರೀದಿಸಿ ಒದಗಿಸುವಂತೆ ಸೂಚಿಸಿದರು.
ವರ್ಚುವಲ್ ವೇದಿಕೆ ನೆರವಿನಿಂದ ಜಿಲ್ಲಾ ಆರೋಗ್ಯಾಧಿಕಾರಿಗಳಿಂದಲೂ ಮಾಹಿತಿ ಪಡೆದು, ಔಷಧಗಳ ಲಭ್ಯತೆ ಹಾಗೂ ಕೊರತೆ ಬಗ್ಗೆ ವಿಚಾರಿಸಿದರು. ಸುವರ್ಣ ಆರೊಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
‘ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧಗಳು ಮತ್ತು ಅಗತ್ಯ ವೈದ್ಯಕೀಯ ಸಲಕರಣೆಗಳು ಲಭ್ಯವಿರಬೇಕು. ಕೊರತೆ ಕಂಡುಬಂದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ, ಆಯುಕ್ತ ಗುರುದತ್ತ ಹೆಗಡೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಅವಿನಾಶ್ ಮೆನನ್ ರಾಜೇಂದ್ರನ್, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (ಕೆಎಸ್ಎಂಎಸ್ಸಿಎಲ್) ವ್ಯವಸ್ಥಾಪಕ ನಿರ್ದೇಶಕ ರಾಹುಲ್ ರತ್ನಂ ಪಾಂಡೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.