ಬೆಂಗಳೂರು: ‘ಕಳೆದ ಲೋಕಸಭಾ ಚುನಾವಣೆ ವೇಳೆ ಮುದ್ರಿಸಲಾಗಿದ್ದ ಕರಪತ್ರದಲ್ಲಿ ಮುದ್ರಕರ ಹೆಸರು ಹಾಗೂ ವಿಳಾಸ ಉಲ್ಲೇಖಿಸಿರಲಿಲ್ಲ‘ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆ ನಡೆಸಲು ಅನುಮತಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಸಂಬಂಧ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
ಪ್ರಕರಣವೇನು?:ತೇಜಸ್ವಿ ಸೂರ್ಯ ಅವರ ಪರವಾಗಿ ನಾರಾಯಣಪ್ಪ ಎಂಬುವರು ಚುನಾವಣಾ ಪ್ರಚಾರಕ್ಕೆಎರಡು ಸಾವಿರ ಕರಪತ್ರಗಳನ್ನು ಮುದ್ರಿಸಿದ್ದರು. ಕರಪತ್ರದಲ್ಲಿ ಮುದ್ರಕರ ಹೆಸರು ಹಾಗೂ ವಿಳಾಸ ನಮೂದಿಸಿರಲಿಲ್ಲ. ಇದು ಅಪರಾಧ ಕೃತ್ಯ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಿದ್ದಾಪುರ ಪೊಲೀಸ್ ಠಾಣೆಗೆ 2019ರ ಏಪ್ರಿಲ್ 18ರಂದು ದೂರು ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಅನುಮತಿ ನೀಡಬೇಕು ಎಂದು ಪೊಲೀಸರು 2ನೇ ಎಸಿಎಂಎಂ ನ್ಯಾಯಾಲಯವನ್ನು ಕೋರಿದ್ದರು. ಇದನ್ನು ಪರಿಗಣಿಸಿದ್ದ ನ್ಯಾಯಾಲಯ ತನಿಖೆಗೆ ಅನುಮಿತಿಸಿ ಆದೇಶಿಸಿತ್ತು.ತನಿಖೆ ನಡೆಸಿದ್ದ ಸಿದ್ಧಾಪುರ ಠಾಣಾ ಪೊಲೀಸರು 2019ರ ಜುಲೈ 2ರಂದು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
‘ನನ್ನ ವಿರುದ್ಧದ ದೋಷಾರೋಪ ಪಟ್ಟಿ ಮತ್ತು 2ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ತೇಜಸ್ವಿ ಸೂರ್ಯ ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.