
ಬೆಂಗಳೂರು: ‘ಸರ್ಕಾರ ಒಂದು ಸಾವಿರ ದಿನಗಳ ಆಡಳಿತ ಪೂರೈಸಿದ್ದು, ನಾವು ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇವೆ. ದೊರೆತ ಅಧಿಕಾರವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕೆಲಸಗಳನ್ನು ಮಾಡಿದ್ದೇನೆ. ನಮ್ಮ ಕೆಲಸಗಳು ನೆನಪಿನಲ್ಲಿ ಉಳಿಯುವಂತಿವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ಸಂಚಾರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಇತರೆ ನಗರಗಳ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ. ನಗರದ ಜನಸಂಖ್ಯೆ 1 ಕೋಟಿ 40 ಲಕ್ಷ. ಪ್ರತಿ ತಿಂಗಳು ಮೂರು ಲಕ್ಷ ವಾಹನಗಳು ನೋಂದಣಿ ಆಗುತ್ತಿವೆ. ಹೊರಗಿನಿಂದಲೇ ನಿತ್ಯ ಲಕ್ಷಾಂತರ ಜನರು ಬಂದು ಹೋಗುತ್ತಾರೆ. ವಾಹನಗಳ ಸುಗಮ ಸಂಚಾರಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ್ದು, ₹27 ಸಾವಿರ ಕೋಟಿ ವೆಚ್ಚದಲ್ಲಿ ಬಿಬಿಸಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಕಡಿಮೆ ಆಗಲಿದೆ ಎಂದು ಅಭಿಪ್ರಾಯಪಟ್ಟರು.
‘ಈಗ ಉಪ ಮುಖ್ಯಮಂತ್ರಿಯಾಗಿ ಸಾವಿರ ದಿನ ಪೂರೈಸಿದ್ದೀರಿ. ಮುಂದಿನ ಸಾವಿರ ದಿನಗಳ ತಮ್ಮ ರಾಜಕೀಯ ಸ್ಥಾನಮಾನ ಏನು’ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ಮುಂದೆ ರಾಜಕೀಯ ಸ್ಥಾನಮಾನ ಏನು ಎಂಬುದನ್ನು ಕಾಲವೇ ಎಲ್ಲವನ್ನೂ ನಿರ್ಧರಿಸುತ್ತದೆ. ಈ ಬಗ್ಗೆ ಏನು ಹೇಳುವುದಿಲ್ಲ’ ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ರಾಜ್ಯದ ಯಾವುದೇ ಯೋಜನೆಗಳಿಗೆ ನೆರವು ನೀಡುತ್ತಿಲ್ಲ. ಸಣ್ಣ ತಪ್ಪುಗಳಿಗೂ ರಾಜ್ಯ ಸರ್ಕಾರವನ್ನು ಟೀಕಿಸುವುದೇ ಕೆಲಸವಾಗಿದೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ರಾಜ್ಯ ಸಂಪುಟ ಸಭೆಯಲ್ಲಿ ಚರ್ಚಿಸಿ, ಕಾರ್ಯಗತಗೊಳಿಸಲಾಗುತ್ತಿದೆ ಎಂದರು.
ಅಧ್ಯಯನ ಪ್ರಕಾರ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರ ಸುರಕ್ಷಿತವಾಗಿದೆ. ಇಲ್ಲಿನ ವಾತಾವರಣ, ಸಂಸ್ಕೃತಿ, ಶಿಕ್ಷಣ, ಆಹಾರ ಎಲ್ಲರಿಗೂ ಇಷ್ಟ. ಜಾಗತಿಕ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದ್ದು, ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ನೀಡಿ, ನಂತರ ಇತರೆ ನಗರಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.