ಯಲಹಂಕ: ‘ಬಿಜೆಪಿಯವರ ಇಲ್ಲಸಲ್ಲದ ದೂರು ಮತ್ತು ಆರೋಪಗಳಿಗೆ ಕಿವಿಗೊಡದೆ, ಎಲ್ಲರೂ ಒಗ್ಗಟ್ಟಾಗಿ ವಿಧಾನಪರಿಷತ್ ಚುನಾವಣೆಯನ್ನು ಎದುರಿಸಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಇಡೀ ರಾಜ್ಯ ಮತ್ತು ರಾಷ್ಟ್ರಕ್ಕೆ ಸಂದೇಶ ರವಾನಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ವೀರಣ್ಣಪಾಳ್ಯ ಸಮೀಪದ ಮ್ಯಾನ್ಫೊ ಕನ್ವೆನ್ಷನ್ ಸೆಂಟರ್ನಲ್ಲಿ ವಿಧಾನ ಪರಿಷತ್ನ ಬೆಂಗಳೂರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಶರೀಫ್ ಪರ ಚುನಾವಣಾ ಪ್ರಚಾರಸಭೆಯಲ್ಲಿ ಅವರು ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾತನಾಡಿ, ‘ಕಳೆದ 2 ವರ್ಷಗಳಿಂದ ಬಿಜೆಪಿ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗಾಗಿ ಪಾಲಿಕೆಗೆ ನಯಾಪೈಸೆ ಅನುದಾನ ನೀಡಿಲ್ಲ. ಹೀಗಾದರೆ ಅಭಿವೃದ್ಧಿ ಕೆಲಸಗಳು ನಡೆಯಲು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದರು. ಶಾಸಕ ಕೃಷ್ಣಬೈರೇಗೌಡ ಮಾತನಾಡಿ, ‘ಬಿಜೆಪಿಯವರು ಬೇರೆಯವರ ಕೈಗೆ ಅಧಿಕಾರ ಹೋಗದೆ ಕೇವಲ ಶಾಸಕರು, ಸಂಸದರ ಕೈಯಲ್ಲಿ ಮಾತ್ರ ಇರಬೇಕೆಂಬ ನಂಬಿಕೆಯಲ್ಲಿದ್ದಾರೆ. ಹೀಗಾಗಿ ಬಿಬಿಎಂಪಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಾವಧಿ ಮುಗಿದು ಹಲವು ತಿಂಗಳುಗಳು ಕಳೆದಿದ್ದರೂ ಸಹ ಇನ್ನೂ ಚುನಾವಣೆ ನಡೆಸುವ ಮುನ್ಸೂಚನೆ ಇಲ್ಲ’ ಎಂದರು.
ಶಾಸಕರಾದ ಬೈರತಿ ಸುರೇಶ್, ರಿಜ್ವಾನ್ ಅರ್ಷದ್, ಶಿವಣ್ಣ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜಕುಮಾರ್, ಮುಖಂಡರಾದ ಪಿ.ಆರ್.ರಮೇಶ್, ಎಂ.ಜಯಗೋಪಾಲಗೌಡ, ದಾನೇಗೌಡ, ಟಿ.ಜಿ.ಚಂದ್ರು ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.