ADVERTISEMENT

ಪೆಟ್ರೋಲ್‌ ದರ ಏರಿಕೆ: ಡಿಕೆಶಿ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 21:31 IST
Last Updated 12 ಜೂನ್ 2020, 21:31 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಕಳೆದ ಆರು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಮಾಡುತ್ತಿರುವುದು ಸರ್ಕಾರದ ಜನವಿರೋಧಿ ಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

‘ಕೋವಿಡ್ 19 ಪಿಡುಗಿನ ಸಂಕಷ್ಟ ಪರಿಸ್ಥಿತಿಯಲ್ಲಿ ಸಿಲುಕಿ ನರಳುತ್ತಿರುವ ಜನಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಾದ ಸರ್ಕಾರವೇ ಅವರನ್ನು ಲೂಟಿ ಮಾಡಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಹೀಗೆ ಜನರನ್ನು ಕಿತ್ತು ತಿನ್ನುವ ಪ್ರವೃತ್ತಿಯನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು’ ಎಂದು ಅವರು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಕಳೆದ ಭಾನುವಾರದಿಂದ ಇಂದಿನವರೆಗೂ ನಿತ್ಯ ಇಂಧನ ಬೆಲೆ ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ ₹ 3.31 ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ ₹ 3.42 ಹೆಚ್ಚಾಗಿದೆ. ಕೋವಿಡ್ ಪಿಡುಗು ಹಾಗೂ ಕೇಂದ್ರ ಸರ್ಕಾರದ ಅವೈಜ್ಞಾನಿಕ ಲಾಕ್‌ಡೌನ್‌ನಿಂದಾಗಿ ಕೈಗಾರಿಕೆ, ವ್ಯಾಪಾರೋದ್ಯಮ, ಆರ್ಥಿಕ ವಲಯ ನೆಲಕಚ್ಚಿದೆ. ಇಂಥ ಸಂಕಷ್ಟದ ಸಮಯದಲ್ಲಿ ಅವುಗಳು ಮತ್ತೆ ಎದ್ದು ನಿಲ್ಲಲು ಸರ್ಕಾರದಿಂದ ದೊಡ್ಡ ಮಟ್ಟದ ನೆರವಿನ ಅಗತ್ಯವಿದೆ. ಆದರೆ ಸರ್ಕಾರ ಅದರ ಬದಲು ಇಂಧನ ಬೆಲೆ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.