ADVERTISEMENT

ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರಿಂದ ಟೀಕೆ: ಡಿ.ಕೆ. ಶಿವಕುಮಾರ್‌ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 10:29 IST
Last Updated 19 ಅಕ್ಟೋಬರ್ 2025, 10:29 IST
   

ಬೆಂಗಳೂರು: ‘ನಗರದಲ್ಲಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಉದ್ಯಮಿಗಳ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಕೋರಮಂಗಲದ ವೀರ ಯೋಧ ಉದ್ಯಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಬೆಂಗಳೂರು ನಡಿಗೆ’ ಅಭಿಯಾನದಲ್ಲಿ ‘ನಾಗರಿಕರೊಂದಿಗೆ ಸಂವಾದ’ ನಡೆಸಿ, ಅಹವಾಲುಗಳನ್ನು ಆಲಿಸಿ‌ದ ಬಳಿಕ ಅವರು ಮಾತನಾಡಿದರು.

‘ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಈಗ ಹೇಗಿದ್ದೇವೆ ಎಂಬುದನ್ನು ಮರೆತು ‘ಎಕ್ಸ್‌’ ಖಾತೆಯಲ್ಲಿ ಟೀಕೆಗಳನ್ನು ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು. ಮರೆತರೆ ಯಶಸ್ಸು ಸಿಗುವುದಿಲ್ಲ’ ಎಂದು ತಿಳಿಸಿದರು.

ADVERTISEMENT

‘ನಗರದಾದ್ಯಂತ ‌ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ‌ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ‌ ಗಮನಕ್ಕೆ ತರುವ ವ್ಯವಸ್ಥೆಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ಅತಿರೇಕಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂಥವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದರು.

‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ಅಭಿವೃದ್ಧಿಗಾಗಿ ನಾವು ಕೈಗೊಂಡಷ್ಟು ತೀರ್ಮಾನಗಳನ್ನು ಯಾರೂ ಕೈಗೊಂಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲ ಮಾಧ್ಯಮಗಳನ್ನು ನಿಯಂತ್ರಣ ‌ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆಗಳ ಸಮಸ್ಯೆಗಳನ್ನು ನಾವೂ ತೋರಿಸುತ್ತೇವೆ’ ಎಂದು ಹೇಳಿದರು. 

‘ನಗರದಲ್ಲಿ ನಿತ್ಯ ಮೂರು ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ಜನಸಂಖ್ಯೆ 1.40 ಕೋಟಿ ಮುಟ್ಟಿದೆ. 70 ಲಕ್ಷ ‌ಮಂದಿ ಪ್ರತಿದಿನ ಹೊರಗಿನಿಂದ ಬಂದು ಹೋಗುತ್ತಿದ್ದಾರೆ. ಉದ್ಯೋಗ, ಶಿಕ್ಷಣ, ವಹಿವಾಟು, ಉದ್ದಿಮೆ ಹೀಗೆ ಅನೇಕ ಕೆಲಸಗಳಿಗಾಗಿ ಬೆಂಗಳೂರನ್ನು ಅವಲಂಬಿಸಿದ್ದಾರೆ’ ಎಂದರು‌.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಅಧಿಕಾರಿಗಳು ಉಪಸ್ಥಿತರಿದ್ದರು.

ಅಹವಾಲು ಸಲ್ಲಿಸಿದ 180 ಜನರು

‘ಬೆಂಗಳೂರು ನಡಿಗೆ ವೇಳೆ ಭಾನುವಾರ 180 ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಶಾಂತಿನಗರ ಹೌಸಿಂಗ್ ಸೊಸೈಟಿ ಸ್ಯಾನಿಟರಿ ಲೈನ್ ಮಳೆ ನೀರು ಪ್ರವಾಹದಿಂದ ತೊಂದರೆಗೆ ಒಳಗಾದ ಪ್ರದೇಶಗಳ ಸಮಸ್ಯೆಗಳು ಕೋರಮಂಗಲ ಮೆಟ್ರೊ ಮಾರ್ಗ ವಿಮಾನ ನಿಲ್ದಾಣಕ್ಕೆ ನೇರ ಬಸ್ ವ್ಯವಸ್ಥೆ ಎಸ್‌ಟಿಪಿ ಅಳವಡಿಕೆ ಬೆಳ್ಳಂದೂರು ಕೆರೆ ಸಮಸ್ಯೆ ಪಾದಚಾರಿ ಮಾರ್ಗ ಸಿ.ಎ ನಿವೇಶನ ಸಸಿ ನೆಡುವಿಕೆ ಹೀಗೆ ಹಲವಾರು ವಿಚಾರಗಳ ಬಗ್ಗೆ ನಾಗರಿಕರು ಗಮನ ಸೆಳೆದಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್‌ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.