ADVERTISEMENT

11 ಬಿಬಿಎಂಪಿ ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತಕ್ಕೆ ಡಿ.ಕೆ. ಸುರೇಶ್ ದೂರು

ಕಾಮಗಾರಿ ನಿರ್ವಹಿಸದೆ ಬಿಲ್ ಪಾವತಿ ಆರೋಪ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 20:55 IST
Last Updated 2 ಸೆಪ್ಟೆಂಬರ್ 2020, 20:55 IST
ಡಿ.ಕೆ.ಸುರೇಶ್
ಡಿ.ಕೆ.ಸುರೇಶ್   

ಬೆಂಗಳೂರು: ‘ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸದೇ ಬಿಲ್ ಪಾವತಿಸಿ ರಾಜ್ಯದ ಬೊಕ್ಕಸಕ್ಕೆ ₹250 ಕೋಟಿ ನಷ್ಟವನ್ನು ಬಿಬಿಎಂಪಿ ಅಧಿಕಾರಿಗಳು ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಪಾಲಿಕೆಯ ಟಿವಿಸಿಸಿ ವಿಭಾಗದ ಮುಖ್ಯ ಎಂಜಿನಿಯರ್ ದೊಡ್ಡಯ್ಯ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್, ವಲಯದ ಮುಖ್ಯ ಎಂಜಿನಿಯರ್ ವಿಜಯಕುಮಾರ್, ಸಹಾಯಕ ಎಂಜಿನಿಯರ್ ಶಿಲ್ಪಾ ಸೇರಿ 11 ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

‘2019–20ನೇ ಸಾಲಿನಲ್ಲಿ ಮಂಜೂರಾಗಿದ್ದ ಕಾಮಗಾರಿಗಳ ಜಾಬ್‌ ಸಂಖ್ಯೆ‌ಗಳನ್ನು 2019ರ ಡಿಸೆಂಬರ್‌ನಲ್ಲಿ ಮಾಡಲಾಗಿದೆ. ಕಾರ್ಯಾದೇಶ ಪಡೆದು ಕಾಮಗಾರಿಯನ್ನೇ ನಿರ್ವಹಿಸದೆ 2020ರ ಜನವರಿಯಲ್ಲಿ ಬಿಲ್‌ಗಳನ್ನು ಪಡೆದು ಕೆಆರ್‌ಐಡಿಎಲ್‌ ಮೂಲಕ ಗುತ್ತಿಗೆದಾರರಿಗೆ ಹಣ ಪಾವತಿಸಲಾಗಿದೆ’ ಎಂದು ಅವರು ದೂರಿದ್ದಾರೆ.

ADVERTISEMENT

‘ವಾರ್ಡ್‌ಗಳಲ್ಲಿ ನಿರ್ವಹಿಸಿರುವ ಕಾಮಗಾರಿಗೂ ಅಂದಾಜು ಪಟ್ಟಿಗೂ ಅಜ–ಗಜಾಂತರ ಇದೆ. ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ’ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

‘ಚರಂಡಿ ಕೆಲಸ ಇಲ್ಲದಿದ್ದರೂ ಹೂಳು ತೆಗೆಯಲಾಗಿದೆ ಎಂದು ಲೆಕ್ಕ ಬರೆದು ಬಿಲ್ ಪಾವತಿಸಲಾಗಿದೆ. ಇದರಲ್ಲಿ ಸುಮಾರು ₹250 ಕೋಟಿ ಸರ್ಕಾರಕ್ಕೆ ನಷ್ಟವಾಗಿರುವ ಸಾಧ್ಯತೆ ಇದೆ. ಪ್ರಕರಣದ ಕೂಲಂಕುಷ ತನಿಖೆ ನಡೆಸಿ ನಷ್ಟವನ್ನು ಸಂಬಂಧಪಟ್ಟ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.