ADVERTISEMENT

ಕುಡಿದ ಅಮಲಿನಲ್ಲಿ ಗಲಾಟೆ: ಸ್ನೇಹಿತರಿಂದಲೇ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 19:30 IST
Last Updated 13 ಅಕ್ಟೋಬರ್ 2021, 19:30 IST

ಬೆಂಗಳೂರು: ಕುಡಿದ ಅಮಲಿನಲ್ಲಿ ಯುವಕರು ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದು ಈ ಸಂಬಂಧ ದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನೆಲಮಂಗಲ ತಾಲ್ಲೂಕಿನ ಶಿವಗಂಗೆ ಸನಿಹದ ಬರಗೇನಹಳ್ಳಿ ಗ್ರಾಮದ ನಿವಾಸಿ ಕೆಂಪಣ್ಣ (22) ಕೊಲೆಯಾದವರು. ಅವರು ಮಾರುತಿ ಟ್ರೇಡರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.

‘ಕೆಂಪಣ್ಣ ಹಾಗೂ ಆತನ ನಾಲ್ವರು ಸ್ನೇಹಿತರು ಮಂಗಳವಾರ ರಾತ್ರಿ ಮದ್ಯದ ಪಾರ್ಟಿ ಮಾಡಿದ್ದರು. ಈ ವೇಳೆ ಪರಸ್ಪರರ ನಡುವೆ ಜಗಳ ನಡೆದಿತ್ತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಕುಪಿತಗೊಂಡ ಸ್ನೇಹಿತರು ಕೆಂಪಣ್ಣನ ತಲೆ ಮೇಲೆ ಮಾರ್ಬಲ್‌ ಕಲ್ಲು ಎತ್ತಿಹಾಕಿದ್ದರು. ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ರಾತ್ರಿ 11 ಗಂಟೆ ಸುಮಾರಿಗೆ ಯಾರೊ ಚೀರಿಕೊಂಡಂತಾಯಿತು. ಮನೆಯಿಂದ ಹೊರಗೆ ಬಂದಾಗ ಕೆಲ ಯುವಕರು ಓಡಿ ಹೋಗುತ್ತಿದ್ದುದು ಕಾಣಿಸಿತು. ಸ್ಥಳಕ್ಕೆ ಹೋಗಿ ನೋಡಿದಾಗ ಯುವಕನೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಸ್ಥಳೀಯರಾದ ಗಿರೀಶ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.