ಬೆಂಗಳೂರು: ಸೈಬರ್ ವಂಚಕರ ‘ಬೆತ್ತಲೆ ವಿಡಿಯೊ’ ಬ್ಲ್ಯಾಕ್ಮೇಲ್ಗೆ ಹೆದರಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ, ಆರೋಪಿಯನ್ನು ನಗರದ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
‘ನಗರದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ವೈದ್ಯ, ಕೆಂಗೇರಿ ರೈಲು ನಿಲ್ದಾಣದ ಸಮೀಪ ಹಳಿ ಮೇಲೆ ರೈಲಿಗೆ ತಲೆಕೊಟ್ಟು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮರಣಪತ್ರ ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಸೈಬರ್ ವಂಚಕರೊಬ್ಬರನ್ನು ಬಂಧಿಸಲಾಗಿದೆ‘ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಸಾಮಾಜಿಕ ಮಾಧ್ಯಮಗಳಲ್ಲಿ ವೈದ್ಯ ಖಾತೆಗಳನ್ನು ತೆರೆದಿದ್ದರು. ಯುವತಿ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ ವಂಚಕ, ವೈದ್ಯನಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು. ಅದನ್ನು ಸ್ವೀಕರಿಸಿದ್ದ ವೈದ್ಯ, ಖಾತೆಯಿಂದ ಬಂದ ಸಂದೇಶಗಳಿಗೆ ಪ್ರತಿಕ್ರಿಯಿಸಲಾರಂಭಿಸಿದ್ದರು. ರಾತ್ರಿ ಕರೆ ಮಾಡಿದ್ದ ವಂಚಕ, ವೈದ್ಯನನ್ನು ಪ್ರಚೋದಿಸಿ ಬೆತ್ತಲೆ ವಿಡಿಯೊ ಸೆರೆಹಿಡಿದು ಬ್ಲ್ಯಾಕ್ಮೇಲ್ ಮಾಡಲಾರಂಭಿಸಿದ್ದ’ ಎಂದೂ ಹೇಳಿದರು.
'ವಂಚಕನ ಬ್ಲ್ಯಾಕ್ಮೇಲ್ನಿಂದ ಹೆದರಿದ್ದ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಿದೆ'ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.