ADVERTISEMENT

ವಿಕ್ಟೋರಿಯಾ ಆಸ್ಪತ್ರೆ: ಸ್ಥಾನಿಕ ವೈದ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 19:30 IST
Last Updated 29 ನವೆಂಬರ್ 2021, 19:30 IST

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಥಾನಿಕ ವೈದ್ಯರು ವಿಕ್ಟೋರಿಯಾ ಆಸ್ಪತ್ರೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಹೀಗಾಗಿ ಹೊರರೋಗಿಗಳು ಪರದಾಡುವಂತಾಯಿತು.

‘ಕೋವಿಡ್‌ ಪರಿಹಾರ ಭತ್ಯೆ ನೀಡುವುದಾಗಿ ಹೇಳಿದ್ದ ಸರ್ಕಾರ ಮಾತು ತಪ್ಪಿದೆ. ಕೋವಿಡ್‌ ಅಪಾಯ ಭತ್ಯೆಯನ್ನು ಕೂಡಲೇ ಪಾವತಿಸಬೇಕು. ಶೈಕ್ಷಣಿಕ ಶುಲ್ಕ ಪರಿಷ್ಕರಿಸಬೇಕು. ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು ಹಾಗೂ ವೃತ್ತಿ ತರಬೇತಿ ಪಡೆಯುತ್ತಿರುವ ವೈದ್ಯರಿಗೆ ಕೂಡಲೇ ಶಿಶಿಕ್ಷು ವೇತನ ಪಾವತಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಆರೋಗ್ಯ ಸಚಿವ ಸುಧಾಕರ್‌ ಅವರು ಹತ್ತು ದಿನಗಳಲ್ಲಿ ಸಮಸ್ಯೆ ಪರಿಹರಿಸುವುದಾಗಿ ಹೇಳಿದ್ದರು. ಅವರು ಮಾತು ಮರೆತಿದ್ದಾರೆ. ಈವರೆಗೆ ನಮ್ಮ ಒಂದೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದೇವೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಮುಂದಿನ ಮೂರು ದಿನಗಳಲ್ಲಿ ಎಲ್ಲಾ ವೈದ್ಯರಿಗೂ ಅಪಾಯ ಭತ್ಯೆ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ’ ಎಂದು ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.