ಬೆಂಗಳೂರು: ಪ್ರತಿಯೊಬ್ಬ ಯುವ ಮತದಾರರು ಚುನಾವಣಾ ರಾಯಭಾರಿಗಳಾಗಿದ್ದು, ಯಾವುದೇ ಆಮಿಷಗಳಿಗೆ ಒಳಗಾಗದೆ ಮತಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಎಂ.ಎಸ್ ರಾಮಯ್ಯ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ’ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಕೆವೈಸಿ ತಂತ್ರಾಂಶದ ಮೂಲಕ ಕ್ಷೇತ್ರದ ಅಭ್ಯರ್ಥಿ ಬಗ್ಗೆ ತಿಳಿದುಕೊಂಡು ಮತದಾನ ಮಾಡಬೇಕು. ಯಾವುದೇ ಅಭ್ಯರ್ಥಿಗೆ ಮತದಾನ ಮಾಡಲು ಇಷ್ಟವಿಲ್ಲದಿದ್ದಲ್ಲಿ ನೋಟಾಗೆ ಮತ ಚಲಾಯಿಸುವ ಅವಕಾಶವಿದೆ. ನಮ್ಮ ಒಂದು ಮತದಿಂದ ಏನೂ ಬದಲಾವಣೆ ಆಗುವುದಿಲ್ಲ ಎಂಬ ಮನೋಭಾವದಿಂದ ಹೊರಬರಬೇಕು’ ಎಂದು ತಿಳಿಸಿದರು.
ಚುನಾವಣಾ ರಾಯಭಾರಿ ನೀತು ವನಜಾಕ್ಷಿ, ‘ಪ್ರಜಾಪ್ರಭುತ್ವದಲ್ಲಿ ಚುನಾವಣೆಯು ಆತ್ಮವಿದ್ದಂತೆ. ಮತಗಳು ಉಸಿರಿದ್ದಂತೆ, ಅದಕ್ಕೆ ಜೀವ ಬರಬೇಕಾದರೆ ನೀವೆಲ್ಲರೂ ತಪ್ಪದೆ ಮತದಾನ ಮಾಡಬೇಕು’ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ 2,000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಪ್ಪದೇ ಮತದಾನ ಮಾಡುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ವಲಯ ಆಯುಕ್ತ ಡಾ. ಆರ್.ಎಲ್. ದೀಪಕ್, ಸ್ನೇಹಲ್, ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಕೆ.ಕೆ ರೈನಾ, ಗೋಕುಲ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಶ್ರೀನಿವಾಸ್ ಮೂರ್ತಿ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ವೇಣುಗೋಪಾಲ್, ವಲಯ ಜಂಟಿ ಆಯುಕ್ತ ಯೋಗೇಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.