ಬೆಂಗಳೂರು: ಬಡವರಿಗೆ ಸ್ವಂತ ಭೂಮಿ ಹಾಗೂ ವಸತಿ ಕಲ್ಪಿಸುವಂತೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಇದೇ 14ರಂದು ರಾತ್ರಿ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ’ವನ್ನು ಆಚರಿಸುವುದಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತಿಳಿಸಿದೆ.
ಕಾರ್ಯಕ್ರಮದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ‘ಬಡವರಿಗೆ ಮೂಲಭೂತ ಹಕ್ಕುಗಳನ್ನು ನೀಡುವಂತೆ ಒತ್ತಾಯಿಸಿ ಇದೇ 14ರ ಸಂಜೆ 6 ಗಂಟೆಗೆ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಹಣತೆಗಳ ಮೆರವಣಿಗೆ ನಡೆಸಲಿದ್ದೇವೆ’ ಎಂದು ತಿಳಿಸಿದರು.
‘ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಬಡವರಿಗೆ ಸ್ವಂತ ಭೂಮಿ ಇಲ್ಲ. ಅವರ ಅಭಿವೃದ್ದಿಗೆ ಶ್ರಮಿಸುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
‘ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ ಆಜಾದ್ ‘ರಾವಣ’ ಹಾಗೂ ಕೇರಳದ ವಯನಾಡಿನ ಭೂಮಿ ಹೋರಾಟದ ಎಂ.ಪಿ.ಕುಂಞ ಕಣಾರನ್ ಭಾಗವಹಿಸಲಿದ್ದಾರೆ. ಅಂದು ನಡುರಾತ್ರಿ 12.05ಕ್ಕೆ ದೊರೆಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ರಾತ್ರಿ ಇಡೀ ಹೋರಾಟದ ಕುರಿತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಸಮಿತಿಯ ಕುಮಾರ ಸಮತಳ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.