ಬೆಂಗಳೂರು: ‘ರಾಜ್ಯದಲ್ಲಿಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಹೆಚ್ಚಾಗಬೇಕು ಹಾಗೂ ಎಲ್ಲ ಸರ್ಕಾರಿ ಶಾಲೆಗಳಲ್ಲಿಶುದ್ಧ ಕುಡಿಯುವ ನೀರು, ಶೌಚಾಲಯ, ಕಾಂಪೌಂಡ್ ಹಾಗೂ ಅಡುಗೆಮನೆ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡಬೇಕು’ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ತಿಳಿಸಿದರು.
ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಬಜೆಟ್ನಲ್ಲಿ ಸರ್ಕಾರಿ ಶಾಲೆ ದತ್ತು ಸ್ವೀಕಾರ ಮಾಡುವ ಯೋಜನೆ ಜಾರಿಗೆ ತರಲಾಯಿತು. ಈವರೆಗೆ ಹಲವು ಶಾಸಕರು, ಸಂಸದರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಖಾಸಗಿ ವಿಶ್ವವಿದ್ಯಾಲಯಗಳಿಂದ ಒಟ್ಟು ಮೂರು ಸಾವಿರ ಸರ್ಕಾರಿ ಶಾಲೆಗಳು ದತ್ತು ಸ್ವೀಕೃತಗೊಂಡಿವೆ’ ಎಂದು ತಿಳಿಸಿದರು.
‘ದತ್ತು ಪಡೆದುಶಾಲೆಗಳಲ್ಲಿ ಕಂಪ್ಯೂಟರ್ ವ್ಯವಸ್ಥೆ, ಶೌಚಗೃಹ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಇನ್ನೂ ಬಹುತೇಕರು ಶಾಲೆಗಳನ್ನು ದತ್ತು ಪಡೆಯಬೇಕಿದೆ. ಜನಪ್ರತಿನಿಧಿಗಳಿಗೆ ನೀಡಿರುವ ಅನುದಾನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಕೆ ಮಾಡಬೇಕಿದೆ’ ಎಂದು ಮನವಿ ಮಾಡಿದರು.
‘ತೆಲಂಗಾಣದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಕೇಂದ್ರ ಸರ್ಕಾರದ ‘ಜಲ ಜೀವನ್ ಮಿಷನ್’ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಬೇಕು. ಜಿಲ್ಲಾವಾರು ಬಳಕೆಯಾಗದಚಾಲ್ತಿ ಖಾತೆಯ (ಆರ್.ಡಿ.ಖಾತೆ) ಹಣವನ್ನು ಇಂತಹ ಕಾರ್ಯಗಳಿಗೆ ಬಳಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ’ ಎಂದು ವಿವರಿಸಿದರು.
‘ಮಕ್ಕಳಿಗೆ ನೀತಿ ಕತೆಗಳನ್ನು ತಿಳಿಸುವ ಉದ್ದೇಶದಿಂದ ಸಂಪನ್ಮೂಲ ವ್ಯಕ್ತಿಗಳಿಂದ 35 ನೀತಿ ಕತೆಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಇದನ್ನು ಪುಸ್ತಕ ರೂಪಕ್ಕೆ ತಂದು ಎಲ್ಲ ಸರ್ಕಾರಿ ಶಾಲೆಗಳಿಗೆ ವಿತರಿಸಲಾಗುವುದು' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.