ADVERTISEMENT

ಸರ್ಕಾರಿ ಕಚೇರಿ ಶೌಚಾಲಯದಲ್ಲಿ ದಂಪತಿ ಕೊಲೆ

​ಪ್ರಜಾವಾಣಿ ವಾರ್ತೆ
Published 7 ಮೇ 2021, 5:07 IST
Last Updated 7 ಮೇ 2021, 5:07 IST

ಬೆಂಗಳೂರು: ಸಾಂಖ್ಯಿಕ ಇಲಾಖೆಯ ಜಿಲ್ಲಾ ಕಚೇರಿಯ ಶೌಚಾಲಯದಲ್ಲಿ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹನುಮಂತರಾಯ (41) ಹಾಗೂ ಅವರ ಪತ್ನಿ ಹೊನ್ನಮ್ಮ (34) ಕೊಲೆಯಾದವರು. ಗುರುವಾರ ಬೆಳಿಗ್ಗೆ ಅವರಿಬ್ಬರನ್ನು ಕೊಲೆ ಮಾಡಲಾಗಿದ್ದು, ಶೌಚಾಲಯದಲ್ಲಿ ಮೃತದೇಹಗಳು ಇದ್ದವು. ಅವುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪೀಣ್ಯ ಬಳಿಯ ಕರಿಹೋಬನಹಳ್ಳಿಯಲ್ಲಿ ಸಾಂಖ್ಯಿಕ ಇಲಾಖೆಯ ಜಿಲ್ಲಾ ಕಚೇರಿ ಇದೆ. ಅದೇ ಕಚೇರಿಯಲ್ಲಿ ಹನುಮಂತರಾಯ ಸೆಕ್ಯುರಿಟಿ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಹೊನ್ನಮ್ಮ ಸಹ ಅದೇ ಕಚೇರಿಯ ಸ್ವಚ್ಛತೆ ಸಿಬ್ಬಂದಿಯಾಗಿದ್ದರು.’

ADVERTISEMENT

‘ಗುರುವಾರ ಬೆಳಿಗ್ಗೆ ಅವರಿಬ್ಬರು ಕಚೇರಿಗೆ ಬಂದಿದ್ದರು. ಅದೇ ಸಂದರ್ಭದಲ್ಲೇ ದುಷ್ಕರ್ಮಿಗಳು, ಇಬ್ಬರನ್ನೂ ಕೊಂದು ಶೌಚಾಲಯದಲ್ಲಿ ಮೃತದೇಹವಿಟ್ಟು ಪರಾರಿಯಾಗಿರುವ ಅನುಮಾನವಿದೆ’ ಎಂದೂ ಪೊಲೀಸರು ತಿಳಿಸಿದರು.

ಮಗನ ಮೇಲೆ ಶಂಕೆ: ‘ಮಗನೇ ಕೊಲೆ ಮಾಡಿರುವ ಶಂಕೆ ಇದೆ. ಆತ ಸದ್ಯ ತಲೆಮರೆಸಿಕೊಂಡಿದ್ದಾನೆ. ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ’ ಎಂದೂ ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.