ಬೆಂಗಳೂರು: ‘ರಾಜ್ಯದಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ 65 ತಾಲ್ಲೂಕುಗಳ ಕುರಿತಂತೆ ಕೂಡಲೇ ಅಧಿಸೂಚನೆ ಹೊರಡಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
‘ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಮತ್ತು ಮೇವು ವ್ಯವಸ್ಥೆ ಮಾಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಹಾಗೂ ಸಾರ್ವಜನಿಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಖುದ್ದು ಹಾಜರಿದ್ದ ಪಶುಸಂಗೋಪನಾ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಪಿ. ಮಣಿವಣ್ಣನ್, ‘ಆಗಸ್ಟ್ ತಿಂಗಳಲ್ಲಿ 56 ತಾಲ್ಲೂಕುಗಳ ಬಗ್ಗೆ ಅಧಿಸೂಚನೆ ಹೊರಡಿಸಲಾಗು ವುದು’ ಎಂದರು. ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಓಕಾ ಅವರು, ‘ಏಕೆ ನಿಮಗೆ ಆಗಸ್ಟ್ ತಿಂಗಳೇ ಪ್ರಶಸ್ತವೇ’ ಎಂದು ಪ್ರಶ್ನಿಸಿದರಲ್ಲದೇ, ‘ಬರಪೀಡಿತ ಪ್ರದೇಶ ಗಳಲ್ಲಿ ಪ್ರತಿ ತಾಲ್ಲೂಕಿಗೆ ಕನಿಷ್ಠ ಒಂದಾದರೂ ಜಾನುವಾರು ಶಿಬಿರ ಸ್ಥಾಪಿಸಬೇಕು’ ಎಂದು ತಾಕೀತು ಮಾಡಿ ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.