ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಮಾರಾಟ ಮಾಡಲು ಹೊರರಾಜ್ಯಗಳಿಂದ ಗಾಂಜಾ ತರಿಸಿಕೊಂಡು ಮನೆಯೊಂದರಲ್ಲಿ ದಾಸ್ತಾನು ಇಟ್ಟಿದ್ದ ಆರು ಮಂದಿ ಅಂತರ ಜಿಲ್ಲಾ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಚಾಮರಾಜನಗರ ಜಿಲ್ಲೆ ಹಾಗೂ ಬೆಂಗಳೂರು ನಗರದ ತಲಾ ಮೂವರು ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಇವರಿಂದ 15 ಕೆ.ಜಿ.ಗಾಂಜಾ, ಮೊಬೈಲ್, ತೂಕದ ಯಂತ್ರ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹10 ಲಕ್ಷ ಎಂದು ಅಂದಾಜಿಸಲಾಗಿದೆ’ ಎಂದು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಮಲ್ಲತ್ತಹಳ್ಳಿ ಸನಿಹದ ಜ್ಞಾನಜ್ಯೋತಿನಗರದ 80 ಅಡಿ ರಸ್ತೆ ಬಳಿಯ ಮನೆಯೊಂದರಲ್ಲಿ ಆರೋಪಿಗಳು ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದರಿಂದ ದಾಳಿ ನಡೆಸಲಾಗಿತ್ತು. ಸಂಗ್ರಹಿಸಿಟ್ಟಿದ್ದ ಗಾಂಜಾವನ್ನು ಯುವಕರಿಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐ.ಟಿ ಉದ್ಯೋಗಿಗಳಿಗೆ ಹಾಗೂ ಉತ್ತರ ಭಾರತದವರಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿ ಅಧಿಕ ಲಾಭ ಗಳಿಸುವುದು ಅವರ ಉದ್ದೇಶವಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ವಿಚಾರಣೆಯನ್ನು ಮುಂದುವರಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.