ಬೆಂಗಳೂರು: ಡ್ರಗ್ಸ್ ಜಾಲ ಸಂಬಂಧ ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ರಿಜೇಶ್ ರವೀಂದ್ರನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಮಗ ಬಿನೀಶ್ ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. 2020ರ ಆಗಸ್ಟ್ 21ರಂದು ರಿಜೇಶ್ ಮನೆಯಲ್ಲಿ ಎನ್ಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ಈ ವೇಳೆ ನಿಷಿದ್ಧ ವಸ್ತುಗಳು ಪತ್ತೆಯಾದ ಕಾರಣ ಅವರನ್ನು ಬಂಧಿಸಲಾಗಿತ್ತು.
‘ಈ ಪ್ರಕರಣದಲ್ಲಿ ನನ್ನನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ. ಶೋಧ ನಡೆಸಿದ ವೇಳೆ ಸಿಕ್ಕ ಮಾದಕ ವಸ್ತುಗಳು ವೈಯಕ್ತಿಕ ಬಳಕೆಗಷ್ಟೇ ಸಂಗ್ರಹಿಸಿದ್ದೆ’ ಎಂದು ಅರ್ಜಿದಾರರು ವಾದಿಸಿದ್ದಾರೆ.
‘40 ಗ್ರಾಂ ಎಂಡಿಎಂಎ ಮಾತ್ರೆಗಳು ಮತ್ತು 180 ಬ್ಲಾಟ್ಸ್ ಎಲ್ಎಸ್ಡಿ ವಶಪಡಿಸಿಕೊಳ್ಳಲಾಗಿದೆ ಮತ್ತು ವಶಪಡಿಸಿಕೊಂಡ ವಸ್ತುಗಳು ವಾಣಿಜ್ಯ ಪ್ರಮಾಣದ್ದಾಗಿದೆ ಎಂಬುದರಲ್ಲಿ ವಿವಾದ ಇಲ್ಲ’ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು, ಅರ್ಜಿ ವಜಾಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.