ADVERTISEMENT

ರಾಜ್ಯ ಮಟ್ಟದ ಅಧ್ಯಯನ ಶಿಬಿರ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 5:09 IST
Last Updated 7 ಏಪ್ರಿಲ್ 2022, 5:09 IST

ಬೆಂಗಳೂರು: ಪ್ರೊ. ಜಿ.ಕೆ.ಗೋವಿಂದರಾವ್, ಡಾ. ಸಿದ್ದಲಿಂಗಯ್ಯ, ಸುರೇಶ್ ಮಣ್ಣೂರ ನೆನಪಿನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಸಂಘಟನೆಗಳ ಜಂಟಿ ವೇದಿಕೆಯ ಪದಾಧಿಕಾರಿಗಳ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಏ.8ರಿಂದ ಮೂರು ದಿನ ನಡೆಯಲಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಕೆಬಿಜಿಎನ್‌ಎಲ್‌ ಸಮುದಾಯಭವನದಲ್ಲಿ ಶಿಬಿರ ನಡೆಯಲಿದೆ. ಬೀದರ್ ಬೌದ್ಧ ವಿಹಾರದ ವರಜ್ಯೋತಿ ಭಂತೆ ಸಾನ್ನಿಧ್ಯದಲ್ಲಿ ಶಿಬಿರವನ್ನು ಸಾಹಿತಿ ಎಸ್‌.ಜಿ. ಸಿದ್ಧರಾಮಯ್ಯ ಉದ್ಘಾಟಿಸುವರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಅಧ್ಯಕ್ಷತೆ ವಹಿಸುವರು. ಕಾಂಗ್ರೆಸ್ ಮುಖಂಡ ಎಚ್‌.ಸಿ.ಮಹದೇವಪ್ಪ, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸೇರಿ ಹಲವರು ಭಾಗವಹಿಸುವರು.

ಮೊದಲ ದಿನ ‘ಅಂಬೇಡ್ಕರ್– ಲೋಹಿಯಾ ಚಿಂತನೆಗಳ ಮೂಲಕ ಜಾತಿ ವಿನಾಶ’, ‘ಮಹಿಳೆಯರು ಮತ್ತು ಜಾತಿ ನ್ಯಾಯ–ಲಿಂಗ ನ್ಯಾಯ’ ಕುರಿತ ಗೋಷ್ಠಿಗಳು ನಡೆಯಲಿವೆ.

ADVERTISEMENT

ಎರಡನೇ ದಿನ ‘ಧರ್ಮಾಂತರ ಏಕೆ? ಮತಾಂತರ ನಿಷೇಧ ಕಾನೂನು ಹಿಂದಿರುವ ಹುನ್ನಾರ’, ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಬ್ರಾಹ್ಮಣವಾದ ಮತ್ತು ಉನ್ನತ ಶಿಕ್ಷಣದಲ್ಲಿ ದಲಿತರ ಸ್ಥಿತಿಗತಿಗಳು’, ‘ಮೂಲ ನಿವಾಸಿಗಳೇ ನೀವೆಷ್ಟು ಬಲ್ಲಿರಿ ನಿಮ್ಮ ಇತಿಹಾಸ?’, ‘ದಲಿತ ಚಳವಳಿಯ ಮುಂದಿನ ಸವಾಲುಗಳು ಹಾಗೂ ಬಲಪಡಿಸುವ ಕುರಿತು’, ಜಿ.ಕೆ.ಗೋವಿಂದರಾವ್, ಡಾ. ಸಿದ್ದಲಿಂಗಯ್ಯ, ಸುರೇಶ್ ಮಣ್ಣೂರ ಕುರಿತ ಗೋಷ್ಠಿಗಳು ನಡೆಯಲಿವೆ.

ಮೂರನೇ ದಿನ (ಏ.10ರಂದು) ‘ದಲಿತ ಸಮುದಾಯದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳು’ ಮತ್ತು ‘ಭೂಮಿ, ಉದ್ಯಮಶೀಲತೆ, ಕೈಗಾರಿಕರಣ, ಕೌಶಲ ಮತ್ತು ಮೀಸಲಾತಿ’ ಕುರಿತ ಗೋಷ್ಠಿಗಳು ನಡೆಯಲಿವೆ. ಅಂದು ಮಧ್ಯಾಹ್ನ 1 ಗಂಟೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಸಮಾರೋಪ ಭಾಷಣ ಮಾಡುವರು ಎಂದು ಲಕ್ಷ‌್ಮೀನಾರಾಯಣ ನಾಗವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.