ADVERTISEMENT

ಇ–ವಿಧಾನಮಂಡಲ ಯೋಜನೆ: ಸರ್ಕಾರಕ್ಕೆ ನೋಟಿಸ್‌

‘ನೇವಾ‘ ಮೂಲಕವೇ ಜಾರಿಗೆ ಕೋರಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 3 ಜನವರಿ 2023, 23:36 IST
Last Updated 3 ಜನವರಿ 2023, 23:36 IST
high court
high court   

ಬೆಂಗಳೂರು: ‘ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ವ್ಯವಹಾರವನ್ನು ಕಾಗದ ರಹಿತಗೊಳಿಸುವ ಉದ್ದೇಶದಿಂದ ಜಾರಿಗೆ ತರಲು ಯೋಜಿಸಿದ್ದ ಇ-ವಿಧಾನ (ನ್ಯಾಷನಲ್‌ ಇ–ವಿಧಾನ ಅಪ್ಲಿಕೇಷನ್‌–ನೇವಾ) ಮಂಡಲ ಯೋಜನೆಯನ್ನು ‘ನೇವಾ’ ಮೂಲಕವೇ ಜಾರಿಗೊಳಿಸಲು ಆದೇಶಿಸಬೇಕು’ ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಕಾಂಗ್ರೆಸ್‌ ಮುಖಂಡರೂ ಆದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭೆ ಮತ್ತು ವಿಧಾನಪರಿಷತ್ ಕಾರ್ಯದರ್ಶಿ
ಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.‌

ADVERTISEMENT

ಪ್ರಕರಣವೇನು?: ‘ಇ-ವಿಧಾನ ಮಂಡಲ ಯೋಜನೆ ಜಾರಿಗೆ 2016-17ರಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ₹ 60.84 ಕೋಟಿ ಅಂದಾಜಿಸಿತ್ತು. ಆದರೆ, ಕರ್ನಾಟಕ ವಿಧಾನ ಮಂಡಲವು ಈ ಯೋಜನೆ ಜಾರಿಗೆ ಕಿಯೋನಿಕ್ಸ್ ಸಂಸ್ಥೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿತ್ತು. ಇದರನ್ವಯ ಕಿಯೋನಿಕ್ಸ್‌, ಯೋಜನೆಗೆ ಸುಮಾರು ₹ 254 ಕೋಟಿ ಮೊತ್ತ ತಗಲುವುದಾಗಿ ವರದಿ ನೀಡಿತ್ತು.

‘ಕಿಯೋನಿಕ್ಸ್ ಮೂಲಕ ಯೋಜನೆ ಜಾರಿ ಮಾಡಿದರೆ ರಾಜ್ಯದ ಬೊಕ್ಕಸಕ್ಕೆ ₹ 254 ಕೋಟಿ ನಷ್ಟವಾಗಲಿದೆ. ಈ ಕುರಿತಂತೆ ಮಧ್ಯಪ್ರವೇಶಿಸಿ ಎಂದು ವಿಧಾನಸಭಾಧ್ಯಕ್ಷರಿಗೆ ಮನವಿ ಮಾಡಲಾಗಿತ್ತು. ಆದರೆ, ವಿಧಾನಸಭಾಧ್ಯಕ್ಷರು ಈ ಕುರಿತು ಗಮನ ಹರಿಸಿಲ್ಲ‘ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ಕಿಯೋನಿಕ್ಸ್ ಮೂಲಕ ₹ 254 ಕೋಟಿ ವೆಚ್ಚದಲ್ಲಿ ಇ-ವಿಧಾನ ಮಂಡಲ ಯೋಜನೆ ಜಾರಿ ಮಾಡುವುದಕ್ಕೆ ಬದಲಾಗಿ ‘ನೇವಾ’ ಮೂಲಕ ಜಾರಿಗೊಳಿಸಲು ಆದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.