ಬೆಂಗಳೂರು: ಕೋವಿಡ್–19 ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಯಿತು.
ಶಾಲಾ ಮಕ್ಕಳಲ್ಲಿ ಶೀತ, ಕೆಮ್ಮು ಹಾಗೂ ಜ್ವರದ ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್ ತಿಳಿಸಿದರು.
ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಕೋವಿಡ್ ಲಸಿಕೆ ಹಾಗೂ ಬೂಸ್ಟರ್ ಡೋಸ್ ತೆಗೆದುಕೊಂಡಿರುವುದನ್ನು ಶಾಲಾ ಮುಖ್ಯಸ್ಥರು ಖಚಿತ ಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಖಾಸಗಿ ಶಾಲಾ ಆಡಳಿತ ಮಂಡಳಿಯವರು ಪೋಷಕರೊಂದಿಗೆ ಸಭೆ ನಡೆಸಿ ಜಾಗೃತಿ ಮೂಡಿಸಬೇಕು ಎಂದರು.
ಒಂದು ತಿಂಗಳ ಮಟ್ಟಿಗೆ ಶಾಲೆಗಳಲ್ಲಿ ಪ್ರಾರ್ಥನೆ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆಗಳ ಮೇಲೆ ಮಿತಿ ಹೇರಬೇಕು ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಕೋರಿದರು.
ಈ ಮಧ್ಯೆ ‘ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ’ ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ‘ಸ್ಥಳೀಯ ಮಟ್ಟದಲ್ಲಿ ಪ್ರಕರಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.