ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಸೇವೆಗಳನ್ನು ಬಲಪಡಿಸುವ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಜಿಇ ಹೆಲ್ತ್ ಕೇರ್, ಸಿಎಸ್ಆರ್ ಬಾಕ್ಸ್/ ಭಾರತ್ ಕೇರ್ಸ್ ಸಹಭಾಗಿತ್ವದಲ್ಲಿ₹ 4 ಕೋಟಿ ವೆಚ್ಚದಲ್ಲಿ ರಾಯಚೂರು ಜಿಲ್ಲೆಯ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, 10 ಆರೋಗ್ಯ ಕೇಂದ್ರಗಳ ಉನ್ನತೀಕರಣ ಪೂರ್ಣಗೊಂಡಿದೆ. ಮೂರು ಕೇಂದ್ರಗಳು ಅಂತಿಮ ಹಂತದಲ್ಲಿವೆ. ಸಿಎಸ್ಆರ್ ನಿಧಿಯನ್ನು ಸದ್ಬಳಕೆ ಮಾಡಿಕೊಳ್ಳಲು ಆರೋಗ್ಯ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಹಿತಿ ನೀಡಿದರು.
ಸಿಎಸ್ಆರ್ ಬಾಕ್ಸ್/ ಭಾರತ್ ಕೇರ್ಸ್ ಸಂಸ್ಥೆಯ ಉಪಾಧ್ಯಕ್ಷ ಮನೋವಿರಾಜ್ ಸಿಂಗ್ ಮಾತನಾಡಿ, ‘ಗ್ರಾಮೀಣ ಮತ್ತು ಹಿಂದುಳಿದ ಸಮುದಾಯಗಳಿಗೆ ಸಮಾನವಾದ ಮತ್ತು ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಸರ್ಕಾರದೊಂದಿಗೆ ಕೈ ಜೋಡಿಸಿದ್ದೇವೆ’ ಎಂದು ತಿಳಿಸಿದರು.
ಜೆಇ ಹೆಲ್ತ್ ಕೇರ್ ಅಧ್ಯಕ್ಷ ಚೈತನ್ಯ ಸಾರವತೆ ಮಾತನಾಡಿ, ‘ಜನರ ಆರೋಗ್ಯ ರಕ್ಷಣೆಯ ದೂರದೃಷ್ಟಿ ಇಟ್ಟುಕೊಂಡು ಆರೋಗ್ಯ ಕೇಂದ್ರಗಳಿಗೆ ಸೌಕರ್ಯ ಕಲ್ಪಿಸಲು ಸರ್ಕಾರದೊಂದಿಗೆ ಹೆಜ್ಜೆ ಹಾಕಿದ್ದೇವೆ’ ಎಂದರು.
ರಾಯಚೂರು ಬಳಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೌಲಾಸಾಬ್ ಮುದ್ದಾಪುರ ವಿಡಿಯೊ ಕಾನ್ಪರೆನ್ಸ್ ಮೂಲಕ ಮಾತನಾಡಿದರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.