ADVERTISEMENT

ಈದ್ ಕಿಟ್ ವಿತರಣೆ ತುಷ್ಠೀಕರಣವಲ್ಲವೆ: ದಿನೇಶ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2025, 13:56 IST
Last Updated 26 ಮಾರ್ಚ್ 2025, 13:56 IST
ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌   

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಬಿಜೆಪಿ ಮುಖಂಡರು ‘ಈದ್ ಕಿಟ್’ ನೀಡುತ್ತಿದ್ದಾರೆ. ಇದು ತುಷ್ಠೀಕರಣ ಅಲ್ಲವೆ? ಓಲೈಕೆ ರಾಜಕಾರಣ ಅಲ್ಲವೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಂಜಾನ್ ಪ್ರಯುಕ್ತ ಮುಸ್ಲಿಮರಿಗೆ ಈದ್ ಕಿಟ್ ವಿತರಿಸುತ್ತಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ಇದೇ ಕಾರ್ಯಕ್ರಮವನ್ನು ಕಾಂಗ್ರೆಸ್‌ನವರು ಮಾಡಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು. ಕಾಂಗ್ರೆಸ್‌ನವರು ಈದ್ ಕಿಟ್ ನೀಡಿದರೆ ಬಿಜೆಪಿಯ ನಾಯಕರು ಇಷ್ಟೊತ್ತಿಗಾಗಲೇ ಬೀದಿಗಿಳಿಯುತ್ತಿದ್ದರು. ಕಾಂಗ್ರೆಸ್ ಪಕ್ಷವು ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ, ಓಲೈಕೆ ರಾಜಕಾರಣ ಮಾಡುತ್ತಿದೆಯೆಂದು ಬೊಂಬಡ ಬಜಾಯಿಸುತ್ತಿದ್ದರು’ ಎಂದರು.

‘ದೇಶದಲ್ಲಿ ಎಲ್ಲರೂ ಒಂದೇ. ಅನಗತ್ಯವಾಗಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂದು ಬಿಜೆಪಿ ಮುಖಂಡರು ತಿರುಗಾಡಿಕೊಂಡಿದ್ದಾರೆ. ಈ ರೀತಿ ಏಕೆ ಮಾಡುತ್ತಿದ್ದಾರೆ ಎಂಬುದನ್ನು ಬಿಜೆಪಿ ಮುಖಂಡರಾದ ವಿಜಯೇಂದ್ರ, ಆರ್.ಅಶೋಕ್, ಸಿ.ಎನ್. ಅಶ್ವತ್ಥನಾರಾಯಣ, ಸಿ.ಟಿ.ರವಿ ಅವರು ಹೇಳಲಿ’ ಎಂದು ತಿರುಗೇಟು ನೀಡಿದರು.

ADVERTISEMENT

ಡಿ.ಕೆ. ಶಿವಕುಮಾರ್ ಅವರು ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸುಳ್ಳಿನ ಮೇಲೆ ಬಿಜೆಪಿಯರು ಹೋರಾಟ ಮಾಡುತ್ತಿದ್ದಾರೆ. ಸಂಸತ್ತಿನ ದಾರಿ ತಪ್ಪಿಸುತ್ತಿರುವ ಕೇಂದ್ರ ಸಚಿವ ಕಿರಣ್ ರಿಜಿಜು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.