ADVERTISEMENT

ಸೆಪ್ಟೆಂಬರ್‌ನಲ್ಲಿ ಉದ್ಯೋಗ ಮೇಳ: ದೇಶಪಾಂಡೆ

ವಿಕಾಸಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2018, 18:57 IST
Last Updated 29 ಆಗಸ್ಟ್ 2018, 18:57 IST
.
.   

ಬೆಂಗಳೂರು: ‘ಯುವಜನರಿಗೆ ಉದ್ಯೋಗ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಸೆಪ್ಟೆಂಬರ್‌ನಲ್ಲಿ ನಗರದಲ್ಲಿ ಎರಡು ದಿನಗಳ ಉದ್ಯೋಗ ಮೇಳ ನಡೆಸಲಾಗುವುದು’ ಎಂದು ಕೌಶಲಾಭಿವೃದ್ಧಿ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದರು.

ವಿಕಾಸಸೌಧದಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ‘ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ನಡೆಸುತ್ತಿರುವ ಮೇಳದಲ್ಲಿ 200 ಕಂಪನಿಗಳು ಭಾಗವಹಿಸಲಿವೆ’ ಎಂದರು.

‘ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಡೆಗಳಲ್ಲೂ 4-5 ಜಿಲ್ಲೆಗಳ ವ್ಯಾಪ್ತಿಗೆ ಒಂದರಂತೆ ಇಂತಹ ಮೇಳಗಳನ್ನು ಹಮ್ಮಿಕೊಳ್ಳಲಾಗುವುದು. ದೂರದ ಜಿಲ್ಲೆಗಳ ಯುವಜನರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.

ADVERTISEMENT

‘ನಮ್ಮಲ್ಲಿ ಎಂಜಿನಿಯರಿಂಗ್ ಮತ್ತು ಇತರೆ ಪದವೀಧರರಿಗೇನೂ ಕೊರತೆಯಿಲ್ಲ. ಆದರೆ, ಎಲ್ಲ ಪದವೀಧರರಿಗೂ ಕೆಲಸ ಸಿಗುತ್ತಿಲ್ಲ. ಹೀಗಾಗಿ ನಿರುದ್ಯೋಗ ಸಮಸ್ಯೆ ದೊಡ್ಡದಾಗಿ ಬೆಳೆದಿದೆ’ ಎಂದರು.

‘ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಇಂತಹ ಅರ್ಜಿಗಳಿಗೆ ಸ್ಪಂದಿಸಲೆಂದೇ ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ತೆರೆಯಲಾಗುವುದು. ಜತೆಗೆ, ಈ ಪಟ್ಟಿಯನ್ನು ಕಾಸಿಯಾದಂತಹ ಸಂಸ್ಥೆಗಳಿಗೆ ನೀಡಲಾಗುವುದು. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಅಲ್ಲದೆ, ಕಾರ್ಮಿಕ ಇಲಾಖೆಯು ಕೈಗೊಂಡಿರುವ ಆಶಾದೀಪ ಯೋಜನೆಯನ್ನು ಕೂಡ ಇದರ ಮೂಲಕ ಉತ್ತೇಜಿಸಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.