ADVERTISEMENT

ಕುಂಬಾರರ ಅಭಿವೃದ್ಧಿ ನಿಗಮ ಸ್ಥಾಪಿಸಿ

ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 17:12 IST
Last Updated 30 ಜನವರಿ 2023, 17:12 IST
ಕುಂಬಾರ ಸಮುದಾಯದವರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು    – ಪ್ರಜಾವಾಣಿ ಚಿತ್ರ
ಕುಂಬಾರ ಸಮುದಾಯದವರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು    – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಕುಂಬಾರರ ಅಭಿವೃದ್ಧಿ ನಿಗಮ ರಚಿಸಬೇಕು ಹಾಗೂ ವಿಶೇಷ ಮೀಸಲಾತಿ ಕಲ್ಪಿಸಬೇಕು’ ಎಂದು ಆಗ್ರಹಿಸಿ ಕುಂಬಾರ ಸಮುದಾಯದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ಕರ್ನಾಟಕ ಕುಂಬಾರರ ಯುವಸೈನ್ಯ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗ
ಳಿಂದ ನಗರಕ್ಕೆ ಬಂದಿರುವ ಸಮುದಾಯದವರು, ತೆಲಸಂಗ ಕುಂಬಾರ ಗುರುಪೀಠದ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಚಿತ್ರದುರ್ಗದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

‘ಕುಂಬಾರ ಸಮುದಾಯದವರು ಸಮಾಜಕ್ಕೆ ಹಲವು ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ 25 ಲಕ್ಷ ಜನಸಂಖ್ಯೆ ಇರುವ ಸಮುದಾಯದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಸಮುದಾಯದ ಅಭಿವೃದ್ಧಿಗಾಗಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ನಮ್ಮ ಮನವಿಗಳಿಗೆ ಸರ್ಕಾರ ಸ್ಪಂದಿಸಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

‘ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ. 22ರಿಂದ ರಥಯಾತ್ರೆ ಆರಂಭಿಸಿ, ಸ್ವಾತಂತ್ರ್ಯ ಉದ್ಯಾನಕ್ಕೆ ಬಂದಿದ್ದೇವೆ. ಬೇಡಿಕೆ ಈಡೇರಿಸುವವರೆಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರಿಸಲಿದ್ದೇವೆ’ ಎಂದು ಹೇಳಿದರು.

‘ಈಗಾಗಲೇ ರಚಿಸಲಾಗಿರುವ ಕುಂಭ ಕಲಾಭಿವೃದ್ಧಿ ಮಂಡಳಿಯನ್ನು ಪ್ರತ್ಯೇಕಿಸಿ, ಕುಂಬಾರರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಸಮುದಾಯದವರಿಗೆ ವಿಶೇಷ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.

ಸಚಿವ ಭೇಟಿ: ಪ್ರತಿಭಟನಾ ಸ್ಥಳಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿ ಮನವಿ ಸ್ವೀಕರಿಸಿದರು. ‘ಪ್ರತ್ಯೇಕ ಕುಂಬಾರರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು’ ಎಂದರು.

ಲಿಖಿತ ಭರವಸೆ ಸಿಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲವೆಂದ ಸಮುದಾಯದವರು, ಧರಣಿ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.