ADVERTISEMENT

ಭಾನುವಾರವೂ ತೆರೆದಿರಲಿವೆ ಜಿಲ್ಲೆಗೊಂದು ನೋಂದಣಿ ಕಚೇರಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2024, 2:08 IST
Last Updated 16 ಮಾರ್ಚ್ 2024, 2:08 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ತಲಾ ಒಂದು ಉಪ ನೋಂದಣಿ ಕಚೇರಿ ಭಾನುವಾರವೂ ತೆರೆದಿರಲಿದೆ. ರಜಾ ದಿನಗಳಲ್ಲೂ ನೋಂದಣಿಗೆ ಅವಕಾಶ ಕಲ್ಪಿಸುವ ಈ ವ್ಯವಸ್ಥೆಯನ್ನು ರಾಜ್ಯದಾದ್ಯಂತ ವಿಸ್ತರಿಸಿ ಕಂದಾಯ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರದಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಈಗ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಭಾನುವಾರದಂದು ತೆರೆದಿರಲಿರುವ ಉಪ ನೋಂದಣಿ ಕಚೇರಿಗಳನ್ನು ಸರದಿಯ ಆಧಾರದಲ್ಲಿ ಗುರುತಿಸಿ, ಮಾಹಿತಿಯನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಭಾನುವಾರ ತೆರಿದಿರುವ ಉಪ ನೋಂದಣಿ ಕಚೇರಿಗೆ ಮಂಗಳವಾರದಂದು ರಜೆ ನೀಡಲಾಗುತ್ತದೆ.

‘ಎನಿವೇರ್‌ ನೋಂದಣಿಯೂ ವಿಸ್ತರಣೆ’: ಸ್ತಿರಾಸ್ತಿ ನೋಂದಣಿಯೂ ಸೇರಿದಂತೆ ಯಾವುದೇ ದಾಖಲೆಗಳನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸುವ ‘ಎನಿವೇರ್‌ ನೋಂದಣಿ’ ವ್ಯವಸ್ಥೆಯನ್ನು ರಾಜ್ಯದಾದ್ಯಂತ ವಿಸ್ತರಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ‘ಎನಿವೇರ್‌ ನೋಂದಣಿ’ ವ್ಯವಸ್ಥೆಯನ್ನು ಆರಂಭದಲ್ಲಿ ಜಾರಿಗೊಳಿಸಲಾಗಿತ್ತು. ನಂತರ ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಎಲ್ಲ ಕಡೆಗಳಲ್ಲಿ ಉತ್ತಮ ಸ್ಪಂದನೆ ದೊರಕಿದೆ. ಆದ್ದರಿಂದ ಈ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.