ಬೆಂಗಳೂರು: ‘ಪ್ರತಿಯೊಬ್ಬರೂ ಜೀವನದಲ್ಲಿ ಸ್ವಾವಲಂಬಿಗಳಾಗಬೇಕು. ವಿದ್ಯಾರ್ಥಿಗಳು ಉದ್ಯಮಿಗಳಾಗುವ ಕ್ಷಮತೆಯನ್ನು ರೂಢಿಸಿಕೊಳ್ಳಬೇಕು’ ಎಂದು ಉದ್ಯಮಿ ರೊನಾಲ್ಡ್ ಕೊಲಾಸೊ ಹೇಳಿದರು.
ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆದ ‘ವಿದ್ಯಾರ್ಥಿಗಳಿಗೆ ಪುನರ್ಮನನ ಕಾರ್ಯಾಗಾರ ಹಾಗೂ ವಿದ್ಯಾರ್ಥಿವೇತನ ವಿತರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಆದರ್ಶ ಜೀವನವನ್ನು ರೂಪಿಸಿಕೊಂಡು ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು. ಧರ್ಮ, ಜಾತಿಯ ಭೇದವಿಲ್ಲದೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ನಾವು ಮಾಡುವ ಸೇವೆಯಲ್ಲಿ ಪ್ರತಿಯೊಬ್ಬರಿಗೂ ಒಳಿತನ್ನು ಬಯಸಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶೇಷಾದ್ರಿಪುರ ಕಾಲೇಜಿನ ಮೊದಲ ಬ್ಯಾಚ್ನ ವಿದ್ಯಾರ್ಥಿಯೂ ಆಗಿರುವ ಕೊಲಾಸೊ ಅವರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲು ₹30 ಲಕ್ಷವನ್ನು ತಾವೇ ನೀಡುವುದಾಗಿ ಘೋಷಿಸಿದರು.
ಮೈಸೂರಿನ ಸ್ವಾಮಿ ಮಹಾಮೇಧಾನಂದಜೀ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ಶೇಷಾದ್ರಿಪುರ ಶಿಕ್ಷಣ ದತ್ತಿಯ ಉಪಾಧ್ಯಕ್ಷ ಟಿ.ಎಸ್. ಹೆಂಜಾರಪ್ಪ, ಕಾಲೇಜಿನ ಆಡಳಿತ ಸಲಹಾ ಮಂಡಳಿಯ ಅಧ್ಯಕ್ಷ ಎಂ.ಎಸ್. ನಟರಾಜ್, ಶೇಷಾದ್ರಿಪುರ ಶಿಕ್ಷಣ ದತ್ತಿಯ ಟ್ರಸ್ಟಿ ಕೆ. ಕೃಷ್ಣಸ್ವಾಮಿ, ಪ್ರಾಂಶುಪಾಲ ಬಿ.ಜಿ. ಭಾಸ್ಕರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.