ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ನಗರದ ವಿವಿಧೆಡೆ ಸಾರ್ವಜನಿಕರನ್ನು ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಕೊತ್ತನೂರು ಠಾಣೆ ಪೊಲೀಸರು, ನಗದು ಸೇರಿ ₹1 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸೈಯದ್ ಇಮ್ರಾನ್ ಅಲಿಯಾಸ್ ಕುಂಟ ಎಂಬಾತನನ್ನು ಬಂಧಿಸಿ, ₹3 ಸಾವಿರ ನಗದು, ಮೊಬೈಲ್ ಫೋನ್, ಮೂರು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 13ರಂದು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಬೀಡಾ ಅಂಗಡಿಗಳಿಗೆ ಸಿಗರೇಟ್ ಪೂರೈಸುವ ಆನಂದ್ ಎಂಬುವರಿಗೆ ಚಾಕು ತೋರಿಸಿ ₹40 ಸಾವಿರ ನಗದು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಕೈಗೊಂಡರು.
‘ಬಾತ್ಮೀದಾರರ ಮಾಹಿತಿ ಆಧರಿಸಿ ವಿವಿಧ ಆಯಾಮಗಳಿಂದ ಮಾಹಿತಿ ಕಲೆ ಹಾಕಿ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ನಗರದ ವಿವಿಧೆಡೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಗೊತ್ತಾಯಿತು. ಆರೋಪಿ ಬಂಧನದಿಂದ ಕೊತ್ತನೂರು, ಹೆಣ್ಣೂರು, ಕಾಡುಗೋಡಿ ಹಾಗೂ ಜೆ.ಸಿ.ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಸುಲಿಗೆ, ಮೊಬೈಲ್ ಹಾಗೂ ಬೈಕ್ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯಿಂದ ನಗದು, ಮೊಬೈಲ್ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಮಾದಕ ವಸ್ತು ವಶ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೃಥ್ವಿರಾಜ್, ನವೀನ್ ಕುಮಾರ್, ಹರಿಸಿಂಗ್ ಎಂಬುವರನ್ನು ಬಂಧಿಸಿ, ₹50 ಸಾವಿರ ಮೌಲ್ಯದ 21.26 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 4ರಂದು ಆರೋಪಿಗಳು ಠಾಣಾ ವ್ಯಾಪ್ತಿಯ ಮಾಲ್ ಆಫ್ ಏಷ್ಯಾ ಹಿಂಭಾಗದ ರೈಲ್ವೆ ಕೆಳಸೇತುವೆ ಬಳಿ ಆಟೊದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ, ದಾಳಿ ನಡೆಸಲಾಯಿತು. ಹೊರ ರಾಜ್ಯದಿಂದ ಮಾದಕ ವಸ್ತು ಖರೀದಿಸಿ, ನಗರದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.