ಬಂಧನ ( ಸಾಂಕೇತಿಕ ಚಿತ್ರ)
ಬೆಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಸುಮನ್, ಗುಲಾಲ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿ, ₹1.50 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
‘ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸುಮನ್ ಹಾಗೂ ಗುಲಾಲ್ ಅವರಿಗೆ ಜನವರಿ 28ರಂದು ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ರೈಲಿನಲ್ಲಿ ಬರುವ ವೇಳೆ ಒಂದೂವರೆ ಲಕ್ಷ ರೂಪಾಯಿ ಮೊತ್ತದ ₹ 500 ಮುಖಬೆಲೆಯ ನೋಟುಗಳು ಸಿಕ್ಕಿವೆ. ನಗರಕ್ಕೆ ಬಂದ ಬಳಿಕ ಈ ಹಣವನ್ನು ತಮ್ಮ ಗ್ರಾಮಕ್ಕೆ ಕಳುಹಿಸಲು ಮುಂದಾಗಿದ್ದರು‘ ಎಂದು ಪೊಲೀಸರು ತಿಳಿಸಿದರು.
‘ಕುಮಾರ್ ಎಂಬುವರ ಬಳಿ ₹ 70 ಸಾವಿರ ನೀಡಿ, ತಮ್ಮ ಖಾತೆಗೆ ವರ್ಗಾಯಿಸುವಂತೆ ಸುಮನ್ ಹೇಳಿದ್ದ. ನೋಟು ಎಣಿಸುವ ವೇಳೆ ಸರದಿ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬಂದ ಕಾರಣ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಖೋಟಾ ನೋಟು ಎಂಬುದು ಗೊತ್ತಾಯಿತು. ಈ ಬಗ್ಗೆ ಕುಮಾರ್ ನೀಡಿದ ದೂರು ಆಧರಿಸಿ ಮೂವರನ್ನೂ ಬಂಧಿಸಿ, ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.