ಬೆಂಗಳೂರು: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯ ಲಾಗಿನ್ ಐ.ಡಿ ಬಳಸಿಕೊಂಡು ನಕಲಿ ಇ–ಸ್ವತ್ತು ಸೃಷ್ಟಿಸಿ ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾಗವೇಣಿ ಅವರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಲಾಗಿನ್ ಐ.ಡಿ ಅಕ್ರಮವಾಗಿ ಬಳಸಿಕೊಂಡಿರುವ ಅಪರಿಚಿತರು, ಇ–ಸ್ವತ್ತು ತಂತ್ರಾಂಶ ಪ್ರವೇಶಿಸಿದ್ದಾರೆ. ತಮಗೆ ಬೇಕಾದ ರೀತಿಯಲ್ಲಿ ನಕಲಿ ಇ–ಸ್ವತ್ತು ಸೃಷ್ಟಿಸಿದ್ದಾರೆ. ಈ ಮೂಲಕ ಸರ್ಕಾರಕ್ಕೆ ನಷ್ಟವನ್ನುಂಟು ಮಾಡಿದ್ದಾರೆ’ ಎಂದೂ ತಿಳಿಸಿದರು.
‘ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಖ್ಯಾಡ ಗ್ರಾಮದ ಇ–ಸ್ವತ್ತು ಪರಿಶೀಲನೆ ವೇಳೆ, ನಕಲಿ ಇ–ಸ್ವತ್ತು ಪತ್ತೆಯಾಗಿದೆ. ಇದೇ ರೀತಿ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಕಲಿ ಇ–ಸ್ವತ್ತು ಇರುವ ಮಾಹಿತಿ ಇದ್ದು, ಪರಿಶೀಲನೆ ನಡೆದಿದೆ’ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.