ADVERTISEMENT

ವಿಚಾರಣೆ ಕೈಬಿಡಲಾಗದು: ಹೈಕೋರ್ಟ್

ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ: ಮುನಿರತ್ನ ವಿರುದ್ಧದ ಚುನಾವಣಾ ತಕರಾರು ಅರ್ಜಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2020, 22:02 IST
Last Updated 28 ಏಪ್ರಿಲ್ 2020, 22:02 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು: ‘ನಕಲಿ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ನನ್ನದೇನೂ ಪಾತ್ರವಿಲ್ಲ. ಆದ್ದರಿಂದ, ಪರಾಜಿತ ಅಭ್ಯರ್ಥಿ ಮುನಿರಾಜು ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ಮೂಲ ವಾದಪತ್ರದ ಆರೋಪದಿಂದ ನನ್ನನ್ನು ಕೈ ಬಿಡಬೇಕು’ ಎಂಬ ಮುನಿರತ್ನ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ ಗೆದ್ದಿದ್ದರು. ಇವರ ವಿರುದ್ಧ ಪರಾಜಯ ಅನುಭವಿಸಿದ ಅಂದಿನ ಬಿಜೆಪಿ ಅಭ್ಯರ್ಥಿ ಮುನಿರಾಜು ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ಕುರಿತಂತೆ ಹೈಕೋರ್ಟ್ ಈ ಮಹತ್ವದ ಮಧ್ಯಂತರ ಆದೇಶ ನೀಡಿದೆ.

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಕುರಿತಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳ ಮಧ್ಯಂತರ ಅರ್ಜಿಗಳ ಮೇಲೆ ಕಾಯ್ದಿರಿಸಿದ ಆದೇಶವನ್ನು ಪ್ರಕಟಿಸಿದೆ.

ADVERTISEMENT

ಮುನಿರಾಜು ಗೌಡ ಅವರು ತಮ್ಮ ಚುನಾವಣಾ ತಕರಾರು ಅರ್ಜಿಯ ವಾದ ಪತ್ರದ ತಿದ್ದುಪಡಿಗೆ ಕೋರಿದ್ದ ಮಧ್ಯಂತರ ಅರ್ಜಿ ಮತ್ತು ಹಲವು ಹೊಸ ದಾಖಲೆಗಳನ್ನು ಸಲ್ಲಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಪೀಠ ಇದೇ ವೇಳೆ ಪುರಸ್ಕರಿಸಿದೆ.

ಆದರೆ, ಮೂಲ ಅರ್ಜಿಯಲ್ಲಿ ಮುನಿರಾಜು ಗೌಡ ಅವರು, ’ನನ್ನನ್ನೇ ಚುನಾಯಿತ ಅಭ್ಯರ್ಥಿ ಎಂದು ಘೋಷಿಸಲು ನಿರ್ದೇಶಿಸಬೇಕು’ ಎಂಬ ಮನವಿಯನ್ನು ತಿರಸ್ಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.