ADVERTISEMENT

ಡಿ.7ಕ್ಕೆ ರೈತರಿಂದ ಚಾಟಿ ಚಳವಳಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 20:33 IST
Last Updated 24 ನವೆಂಬರ್ 2020, 20:33 IST

ಬೆಂಗಳೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಅನ್ನದಾತರ ಬದುಕನ್ನು ಸಂಕಷ್ಟಕ್ಕೆ ನೂಕುತ್ತಿದೆ’ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯು ಡಿ.7ಕ್ಕೆ ಚಾಟಿ ಚಳವಳಿ ಹಮ್ಮಿಕೊಂಡಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಚಾಟಿ ಚಳವಳಿಯ ಭಾಗವಾಗಿ ಅಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಸರ್ಕಾರವು ಗ್ರಾಮೀಣ ಜನತೆಯ ಬದುಕನ್ನು ಕಸಿದುಕೊಳ್ಳಲು ಮುಂದಾಗಿದ್ದು, ಎಲ್ಲ ಅಧಿಕಾರಗಳನ್ನು ಖಾಸಗಿ ಕಂಪನಿಗಳಿಗೆ ನೀಡುತ್ತಿದೆ. ಅವರಿಗೆ ಬೇಕಾದ ರೀತಿಯಲ್ಲಿ ಕಾನೂನುಗಳನ್ನು ರಚನೆ ಮಾಡಲಾಗುತ್ತಿದೆ. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಈಗ ರೈತರ ಹಿತವನ್ನು ಮರೆತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಕಾಣಿಸಿಕೊಂಡ ಪ್ರವಾಹದಿಂದ ಹೊಲ, ಮನೆಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಸರ್ಕಾರಕ್ಕೆಈವರೆಗೂ ಸಾಧ್ಯವಾಗಲಿಲ್ಲ. ಮಂತ್ರಿಗಿರಿಗೋಸ್ಕರ ದೆಹಲಿಗೆ ಹೋಗುವ ಜನಪ್ರತಿನಿಧಿಗಳು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೇಳಲು ಮೀನಮೇಷ ಎಣಿಸುತ್ತಿದ್ದಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.