ಬೆಂಗಳೂರು: ಪಿಎಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೊಶಿಪ್ ಮೊತ್ತವನ್ನು ಕಡಿತಗೊಳಿಸಿರುವ ರಾಜ್ಯಸರ್ಕಾರದ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಅಸಮಾಧಾನ ವ್ಯಕ್ತಪಡಿಸಿದೆ.
ಈ ಕುರಿತು ‘ಪ್ರಜಾವಾಣಿ’ಯಲ್ಲಿ ಭಾನುವಾರ ವರದಿ ಪ್ರಕಟವಾಗಿತ್ತು.
‘ಕೊರೊನಾ ನೆಪವೊಡ್ಡಿ ಫೆಲೊಶಿಪ್ ಮೊತ್ತ ಕಡಿತಗೊಳಿಸಿರುವುದು ಸರಿಯಲ್ಲ. ಮುಸ್ಲಿಮರ ಸ್ಥಿತಿ–ಗತಿ ಕುರಿತು ವರದಿ ನೀಡಿರುವ ನ್ಯಾಯಮೂರ್ತಿ ರಾಜೇಂದರ್ ಸಾಚಾರ್ ನೇತೃತ್ವದ ಆಯೋಗವು, ಮುಸ್ಲಿಮರನ್ನು ಶೈಕ್ಷಣಿಕವಾಗಿ ಮೇಲಕ್ಕೆತ್ತಬೇಕು ಎಂದು ಹೇಳಿದ್ದರು. ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮರ ಏಳಿಗೆಗೆ ಕ್ರಮ ಕೈಗೊಳ್ಳಬೇಕಾದುದು ಆಯಾ ಸರ್ಕಾರಗಳ ಜವಾಬ್ದಾರಿ’ ಎಂದು ಪಿಎಫ್ಐನ ರಾಜ್ಯ ಉಪಾಧ್ಯಕ್ಷ ಅಯ್ಯೂಬ್ ಕೆ. ಅಗ್ನಾಡಿ ಹೇಳಿದ್ದಾರೆ.
‘ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಿಗೆ ನೀಡಲಾಗುವ ಅನುದಾನದ ಪೈಕಿ, ₹468 ಕೋಟಿಯನ್ನು ಕಡಿತಗೊಳಿಸುವ ಬಗ್ಗೆ ರಾಜ್ಯಸರ್ಕಾರ ಈಗಾಗಲೇ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಪಕ್ಷಪಾತಿ ಧೋರಣೆ ಬದಿಗಿಟ್ಟು, ಅಲ್ಪಸಂಖ್ಯಾತರ ಶೈಕ್ಷಣಿಕ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.