ಬೆಂಗಳೂರು: ಗಾಂಧಿ ಜಯಂತಿ ಅಂಗವಾಗಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ 500 ಅಡಿ ಉದ್ದದ ರಾಷ್ಟ್ರ ಧ್ವಜದ ಬೃಹತ್ ತಿರಂಗಾ ಯಾತ್ರೆ ನಡೆಯಿತು.
ನಗರದ ಕಮ್ಮನಹಳ್ಳಿಯ ಜ್ಯೋತಿ ಶಾಲೆಯಿಂದ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ನಡೆದ ಈ ಯಾತ್ರೆಯಲ್ಲಿ ತ್ರಿವರ್ಣ ಧ್ವಜ ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಈ ಯಾತ್ರೆ ನಡೆಯಿತು. ಮಹಾತ್ಮ ಗಾಂಧೀಜಿ ಮತ್ತಿತರ ನಾಯಕರ ಪೋಷಾಕು ತೊಟ್ಟ ಶಾಲಾ ವಿದ್ಯಾರ್ಥಿಗಳು ಕೂಡಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
ಶ್ರೀನಿವಾಸ್ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಅವರು ತ್ಯಾಗ, ಬಲಿದಾನದ ಸಂಕೇತ. ಕಾಂಗ್ರೆಸ್ನ ಹಲವು ನಾಯಕರು ದೇಶಕ್ಕೆ ಪ್ರಾಣಾರ್ಪಣೆ ಮಾಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಒಗ್ಗಟ್ಟಿನಿಂದ ಇರುವ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿವೆ. ಇಂಥ ವಿಭಜಕ ಶಕ್ತಿಗಳಿಗೆ ಕಾಂಗ್ರೆಸ್ ಎಂದೆಂದಿಗೂ ಅವಕಾಶ ನೀಡುವುದಿಲ್ಲ’ ಎಂದರು.
‘ಕೋಮು ಶಕ್ತಿಗಳು ಅನಗತ್ಯ ವಿಚಾರಗಳ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಯುವ ಕಾಂಗ್ರೆಸ್ ಶಾಂತಿಯ ಸಂದೇಶ ಸಾರಲು ಈ ಯಾತ್ರೆ ಹಮ್ಮಿಕೊಂಡಿದೆ’ ಎಂದರು.
ರಕ್ಷಾ ರಾಮಯ್ಯ ಮಾತನಾಡಿ, ‘ಯುವ ಸಮೂಹಕ್ಕೆ ಮಹಾತ್ಮಾ ಗಾಂಧೀಜಿ ಅವರ ತತ್ವ, ಸಿದ್ಧಾಂತ, ಶಾಂತಿ– ಮಂತ್ರಗಳನ್ನು ತಲುಪಿಸುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಂಡಿದ್ದೇವೆ. ಯುವ ಸಮೂಹ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.
ರಾಷ್ಟ್ರೀಯ ಯುವ ಕಾಂಗ್ರೆಸ್ನ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲಾವರು, ಕಾರ್ಯದರ್ಶಿ ಸುರಭಿ ದ್ವಿವೇದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.