ADVERTISEMENT

ಆಹಾರ ಕಿಟ್‌ ಅಕ್ರಮ ದಾಸ್ತಾನು: ಬೈರತಿ ಬಸವರಾಜು ವಿರುದ್ಧ ಕಾಂಗ್ರೆಸ್‌ ಕಿಡಿ

​ಪ್ರಜಾವಾಣಿ ವಾರ್ತೆ
Published 22 ಮೇ 2020, 21:19 IST
Last Updated 22 ಮೇ 2020, 21:19 IST
ಆಹಾರ ಕಿಟ್‌ಗಳನ್ನು ಸಿದ್ದರಾಮಯ್ಯ ಪರಿಶೀಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಮುಖಂಡ ವಿ.ಎಸ್‌.ಉಗ್ರಪ್ಪ, ಪಾಲಿಕೆ ಸದಸ್ಯೆ ರಾಧಮ್ಮ ವೆಂಕಟೇಶ್, ಕಲ್ಕೆರೆ ನಾರಾಯಣಸ್ವಾಮಿ, ಅಗರ ಪ್ರಕಾಶ್, ವೆಂಕಟೇಶ್, ಮಂಜುನಾಥ್ ಇದ್ದರು.
ಆಹಾರ ಕಿಟ್‌ಗಳನ್ನು ಸಿದ್ದರಾಮಯ್ಯ ಪರಿಶೀಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಮುಖಂಡ ವಿ.ಎಸ್‌.ಉಗ್ರಪ್ಪ, ಪಾಲಿಕೆ ಸದಸ್ಯೆ ರಾಧಮ್ಮ ವೆಂಕಟೇಶ್, ಕಲ್ಕೆರೆ ನಾರಾಯಣಸ್ವಾಮಿ, ಅಗರ ಪ್ರಕಾಶ್, ವೆಂಕಟೇಶ್, ಮಂಜುನಾಥ್ ಇದ್ದರು.   

ಕೆ.ಆರ್.ಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಸಾರ್ವಜನಿಕರಿಗೆ ಹಂಚಬೇಕಾದ ಆಹಾರ ಧಾನ್ಯಗಳ ಕಿಟ್‌ಗಳನ್ನು ಸಚಿವ ಬೈರತಿ ಬಸವರಾಜು ಮತ್ತು ಪಾಲಿಕೆಯ ಬಿಜೆಪಿ ಸದಸ್ಯರು ಅಕ್ರಮವಾಗಿ ದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ವಲಸೆ ಕಾರ್ಮಿಕರಿಗೆ ವಿತರಿಸಬೇಕಾದ ದಿನಸಿ ಕಿಟ್ ಗಳನ್ನು ಅಕ್ರಮ ದಾಸ್ತಾನು ಮಾಡಲಾಗಿದೆ ಎಂದು ಆರೋಪಿಸಿ ರಾಮಮೂರ್ತಿ
ನಗರದ ಲೋಟಸ್ ಕಲ್ಯಾಣ ಮಂಟಪ ಎದುರು ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಇದಕ್ಕೂ ಮುಂಚೆ ಸಿದ್ದರಾಮಯ್ಯ ದಾಸ್ತಾನು ಮಾಡಿದ್ದ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರಿಂದ ಮಾಹಿತಿ ಪಡೆದರು.

ADVERTISEMENT

‘ಬಿಬಿಎಂಪಿ ಅಧಿಕಾರಿಗಳು ಬಿಜೆಪಿ ಶಾಸಕರ ಮತ್ತು ಪಾಲಿಕೆ ಸದಸ್ಯರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಬಿಜೆಪಿ ಮಂತ್ರಿಗಳು, ಶಾಸಕರು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಶೇಖರಿಸಿದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೈರತಿ ಬಸವರಾಜು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.

‘ನಾಲ್ಕು ಲಕ್ಷ ಕಿಟ್ ಹಂಚಿರುವುದಾಗಿ ಕಾರ್ಮಿಕ ಇಲಾಖೆ ಲೆಕ್ಕ ಕೊಟ್ಟಿದೆ. ಸರ್ಕಾರದ ಕಿಟ್‌ಗಳ ಮೇಲೆ ಶಾಸಕರು ತಮ್ಮ ಭಾವಚಿತ್ರ
ಹಾಕಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ದಿನಸಿ ಹಂಚುತ್ತಿದ್ದಾರೆ’ ಎಂದು ಆರೋಪಿಸಿದರು.

‘ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಸಹ ಆಹಾರ ಕಿಟ್‌ಗಳ ಮೇಲೆ ತಮ್ಮ ಫೋಟೋ ಹಾಕಿಸಿದ್ದರು. ಇದು ಭಂಡತನದ ಪರಮಾವಧಿ. ಅವರು ಶಾಸಕರಾಗಲು ಅನರ್ಹರು’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.