ADVERTISEMENT

ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿದವರಿಗೆ ದಂಡ ವಿಧಿಸಿ: ಆಯುಕ್ತ ಡಿ.ಎಸ್.ರಮೇಶ್

ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್.ರಮೇಶ್ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 0:10 IST
Last Updated 24 ಸೆಪ್ಟೆಂಬರ್ 2025, 0:10 IST
ಪಾದಚಾರಿ ಮಾರ್ಗವನ್ನು ಅತಿಕ್ರಮಣ ಮಾಡಿರುವ ಅಂಗಡಿಯ ಮಾಲೀಕನಿಗೆ ತೆರವುಗೊಳಿಸುವಂತೆ ಡಿ.ಎಸ್. ರಮೇಶ್ ಸೂಚಿಸಿದರು
ಪಾದಚಾರಿ ಮಾರ್ಗವನ್ನು ಅತಿಕ್ರಮಣ ಮಾಡಿರುವ ಅಂಗಡಿಯ ಮಾಲೀಕನಿಗೆ ತೆರವುಗೊಳಿಸುವಂತೆ ಡಿ.ಎಸ್. ರಮೇಶ್ ಸೂಚಿಸಿದರು   

ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗಿನ ಪಾದಚಾರಿ ಮಾರ್ಗವನ್ನು ಅತಿಕ್ರಮಣ ಮಾಡಿದವರಿಗೆ ನೋಟಿಸ್‌ ನೀಡಿ, ದಂಡ ವಿಧಿಸುವುದರ ಜೊತೆಗೆ ಒತ್ತುವರಿ ತೆರವುಗೊಳಿಸಬೇಕು ಎಂದು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್.ರಮೇಶ್ ಅಧಿಕಾರಿಗಳಿಗೆ ಸೂಚಿಸಿದರು. 

‘ಇಬ್ಬಲೂರು ಜಂಕ್ಷನ್‌ನಿಂದ ಟಿನ್‌ ಫ್ಯಾಕ್ಟರಿವರೆಗಿನ ರಸ್ತೆ, ಚರಂಡಿ, ಪಾದಚಾರಿ ಮಾರ್ಗಕ್ಕೆ ಅಳವಡಿಸಿರುವ ಕಾಂಕ್ರೀಟ್‌ ಸ್ಲ್ಯಾಬ್‌ಗಳನ್ನು ಸರಿಪಡಿಸಬೇಕು. ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಬಿದ್ದಿದ್ದು, ಸಂಬಂಧಪಟ್ಟ ನಿವೇಶನದಾರರಿಗೆ ನೋಟಿಸ್‌ ನೀಡಿ, ಸ್ವಚ್ಛತೆ ಕಾಪಾಡುವಂತೆ ತಿಳಿಸಬೇಕು. ಇಲ್ಲದಿದ್ದರೆ ನಗರ ಪಾಲಿಕೆ ಸ್ವಚ್ಛಗೊಳಿಸಿ, ನಿವೇಶನದಾರರಿಂದ ದಂಡ ವಸೂಲಿ ಮಾಡಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

‘ಮೆಟ್ರೊ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಮೆಟ್ರೊ ಪಿಲ್ಲರ್‌ ಮತ್ತು ರೈಲ್ವೆ ಲೈನ್‌ನ ಉದ್ದಕ್ಕೂ ಸಂಗ್ರಹವಾಗಿರುವ ಕಟ್ಟಡ ತ್ಯಾಜ್ಯ ಮತ್ತು ಕಸ ತೆರವುಗೊಳಿಸಬೇಕು’ ಎಂದರು. 

ADVERTISEMENT

‘ಸ್ಥಳೀಯ ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆಹರಿಸಬೇಕು. ವಾರ್ಡ್‌ಮಟ್ಟದಲ್ಲಿ ಇದಕ್ಕೆ ಬೇಕಾದ ತಯಾರಿ ಮಾಡಿಕೊಂಡು, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ’ ಎಂದು ತಿಳಿಸಿದರು. 

ರಾಜಕಾಲುವೆ ಹೂಳು ತೆಗೆಯಲು ಸೂಚನೆ 

ಬೆಂಗಳೂರು: ಉತ್ತರ ನಗರ ಪಾಲಿಕೆಯ ವೀರಣ್ಣಪಾಳ್ಯದಲ್ಲಿ ಇರುವ ರಾಜಕಾಲುವೆಯಲ್ಲಿ ಹೂಳು ಎತ್ತುವ ಕಾರ್ಯ ಕೈಗೊಳ್ಳಬೇಕು ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.  ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದ ಅವರು ‘ಈ ಭಾಗದಲ್ಲಿ ಪ್ರತಿದಿನ ಕಸದ ಸಂಗ್ರಹಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ದೂರು ಬಂದಿದೆ. ನಿತ್ಯ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಬೇಕು. ಪಾದಚಾರಿ ಮಾರ್ಗದಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದನ್ನು ನಿಯಂತ್ರಿಸಲು ರಾತ್ರಿ ಗಸ್ತು ಪ್ರಾರಂಭಿಸಬೇಕು. ಕಸ ಹಾಕುವವರನ್ನು ಗುರುತಿಸಿ ಸ್ಥಳದಲ್ಲಿಯೇ ದಂಡ ವಿಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ‘ರಸ್ತೆ ಗುಂಡಿಗಳನ್ನು ಮುಚ್ಚುವ ಮತ್ತು ರಸ್ತೆ ದುರಸ್ತಿ ಕಾರ್ಯ ಹಾಗೂ ಇನ್ನಿತರೆ ಅಭಿವೃದ್ದಿ ಕಾಮಗಾರಿಗಳ ಕುರಿತು ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರೊಂದಿಗೆ ಅವರು ಚರ್ಚಿಸಿದರು.  ‘ಗುಂಡಿ ಮುಚ್ಚುವ ಕಾರ್ಯ ರಸ್ತೆ ದುರಸ್ತಿ ವೈಟ್ ಟಾಪಿಂಗ್ ಸೇರಿದಂತೆ ಎಲ್ಲಾ ತುರ್ತು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು. 

‘ವೈಟ್ ಟಾಪಿಂಗ್ ಕಾಮಗಾರಿಗಳಿಗೆ ವೇಗ ನೀಡಿ’

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದು ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು ‘ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಕಡೆ ಎಲ್ಲ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. 

‘ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಪ್ಯಾಚ್‌ವರ್ಕ್ ಇದ್ದರೆ ಅದನ್ನು ಗುತ್ತಿಗೆ ಪಡೆದ ಸಂಸ್ಥೆಗಳಿಂದಲೇ ಮುಚ್ಚಿಸಲು ಕ್ರಮ ಕೈಗೊಳ್ಳಬೇಕು. ಇತರೆ ರಸ್ತೆಗಳ ಗುಂಡಿಗಳನ್ನು ನಗರ ಪಾಲಿಕೆಯ ವಿಭಾಗದ ಎಂಜಿನಿಯರ್‌ಗಳು ಮುಚ್ಚುವ ಕೆಲಸ ಮಾಡಬೇಕು’ ಎಂದು ಹೇಳಿದರು.   ‘ನಾರಾಯಣ ಪಿಳೈ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾರ್ಯ ಪ್ರಗತಿಯಲ್ಲಿದ್ದು ಅದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಸೇಂಟ್ ಜಾನ್ಸ್ ಚರ್ಚ್ ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪ್ರಾರಂಭಿಸಿದ್ದು ಬಾಕಿಯಿರುವ ರಸ್ತೆ ಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು’ ಎಂದರು. 

ಕೆ.ಆರ್. ವೃತ್ತದಲ್ಲಿ ಕೆಲವೆಡೆ ರಸ್ತೆ ಹಾಳಾಗಿದ್ದು ಅದನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ದುರಸ್ತಿ ಕಾರ್ಯವನ್ನು ನಡೆಸಬೇಕು. ರೇಸ್‌ಕೋರ್ಸ್ ರಸ್ತೆಯಲ್ಲಿ ರಸ್ತೆ ಗುಂಡಿಗಳು ಹಾಗೂ ಪ್ಯಾಚ್‌ವರ್ಕ್ ಅನ್ನು ಎರಡು ದಿನಗಳೊಳಗೆ ಕೈಗೊಳ್ಳಬೇಕು. ಶಿವಾನಂದ ವೃತ್ತದಲ್ಲಿ ಈಗಾಗಲೇ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದು ಸರ್ವೀಸ್ ರಸ್ತೆಯ ಪ್ಯಾಚ್ ವರ್ಕ್ ಮಾಡಬೇಕು. ಇದಲ್ಲದೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.