ಬೆಂಗಳೂರು: ‘ಕೌಶಲ ಅಭಿವೃದ್ಧಿಗಾಗಿ ಹೂಡಿಕೆ ಮಾಡುವುದರಿಂದ ಉದ್ಯಮಗಳಿಗೆ ಲಾಭದಾಯಕ ಹಾಗೂ ಉದ್ಯೋಗಿಗಳಿಗೂ ಪ್ರಯೋಜನಕಾರಿ. ಹಾಗಾಗಿ,ಕೌಶಲಾಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಗೆ ಆದ್ಯತೆ ನೀಡಬೇಕು’ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದರು.
ದಾಬಸ್ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) ₹20 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ‘ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಸ್ಕಿಲ್ ಡೆವಲಪ್ಮೆಂಟ್’ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಉದ್ಯೋಗಿಗಳು ಕೌಶಲ ಮತ್ತು ಜ್ಞಾನವನ್ನು ಹೊಂದಿರಬೇಕು. ಆಗ ಮಾತ್ರ ಬೇರೆ ಸ್ಪರ್ಧಿಗಳಿಗಿಂತ ಮುಂದಿರಲು ಸಾಧ್ಯ. ಕೌಶಲಗಳು ಜನರನ್ನು ಸಬಲೀಕರಣಗೊಳಿಸಲು, ಅವರ ಭವಿಷ್ಯವನ್ನು ರಕ್ಷಿಸಲು ಮತ್ತು ವ್ಯಕ್ತಿಯ ಒಟ್ಟಾರೆ ಅಭಿವೃದ್ಧಿಗೆ ಒಂದು ಪ್ರಮುಖ ಸಾಧನ’ ಎಂದು ಹೇಳಿದರು.
‘ರಾಜ್ಯ ಸರ್ಕಾರ ಈ ಕೌಶಲ ತರಬೇತಿ ಕೇಂದ್ರದ ನಿರ್ಮಾಣಕ್ಕೆ ಅಗತ್ಯವಾದ ಎಲ್ಲ ನೆರವನ್ನೂ ನೀಡಲಿದೆ. ಇದು, ವಿಶ್ವದರ್ಜೆಯ ಅತ್ಯುನ್ನತ ಆಧುನಿಕ ಕೇಂದ್ರವಾಗಲಿ. ಕಟ್ಟಡ ನಿರ್ಮಾಣ ಕಾರ್ಯ ಶೀಘ್ರವಾಗಿ ಪೂರ್ಣಗೊಂಡು, ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವಂತಾಗಲಿ’ ಎಂದು ಶುಭ ಹಾರೈಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.