ಕೆ.ಆರ್.ಪುರ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದ ಸುಮಾರು ₹8 ಕೋಟಿ ಮೌಲ್ಯದ ಗ್ರಾಮಠಾಣಾ ಆಸ್ತಿಯನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ಸಂರಕ್ಷಿಸಿದೆ.
ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಅಗ್ರಹಾರ ಗ್ರಾಮದಲ್ಲಿ ಸರ್ಕಾರಿ ಸ್ವತ್ತಿನ ಸಂಖ್ಯೆ 51/1 ರಲ್ಲಿ 125×170 ಅಡಿ ವಿಸ್ತೀರ್ಣದ ಜಾಗವನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಕಾರಣಿ ಸಮಿತಿ ನಿರ್ಧಾರದಂತೆ ರಕ್ಷಣೆ ಮಾಡಲಾಗಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಗ್ರಾಮ ಠಾಣಾ ಆಸ್ತಿಯನ್ನು ಪಡೆದುಕೊಂಡಿದ್ದ ನಾರಾಯಣರೆಡ್ಡಿ ಅವರ ಹೆಸರಿಗೆ ಖಾತೆ ಮಾಡಿಕೊಡಲು ಹಿಂದಿನ ಕಾರ್ಯನಿರ್ವಹಣ ಅಧಿಕಾರಿ ಮಂಜುನಾಥ್ ಅದೇಶ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿ ಹೈಕೋರ್ಟ್ ಮೊರೆಹೋಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿ, ಈ ವಿವಾದವನ್ನು ಗ್ರಾಮ ಪಂಚಾಯಿತಿಯೇ ನಿರ್ಧಾರ ಕೈಗೊಳ್ಳುವಂತೆ ಬಿದರಹಳ್ಳಿ ಗ್ರಾಮ ಪಂಚಾಯಿತಿಗೆ ಆದೇಶ ನೀಡಿತ್ತು. ನಂತರ ಗ್ರಾಮ ಸಭೆಯಲ್ಲಿ ದಾಖಲೆಗಳನ್ನೆಲ್ಲ ಪರಿಶೀಲಿಸಲಾಯಿತು. ನಾರಾಯಣರೆಡ್ಡಿ ಅವರು, ಜಾಗದ ಸಂಬಂಧ ಯಾವುದೇ ಅಧಿಕೃತ ದಾಖಲೆಗಳನ್ನು ಸಲ್ಲಿಸಿರಲಿಲ್ಲ ಎಂಬುದು ದೃಢಪಟ್ಟಿತು.
‘ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ತಿಯನ್ನು ಸಂರಕ್ಷಣೆ ಮಾಡಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮುನಿಯಪ್ಪ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.