ಬೆಂಗಳೂರು: ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ₹ 50 ಕೋಟಿ ವಂಚನೆ ಪ್ರಕರಣ ಸಂಬಂಧ, ಪ್ರಮುಖ ಆರೋಪಿ ವಿಜಯ್ ಆಕಾಶ್ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಹೈದರಾಬಾದ್ನಲ್ಲಿ ಬಂಧಿಸಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.
ಕೃಷಿ ಮಾರಾಟ ಮಂಡಳಿ ನೌಕರರು, ಬ್ಯಾಂಕ್ ಅಧಿಕಾರಿಗಳು ಸೇರಿದಂತೆ 15 ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ, ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿತ್ತು.
'ವಂಚನೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿ ತಲೆಮರೆಸಿಕೊಂಡಿದ್ದ ಚೆನ್ನೈನ ವಿಜಯ್ ಆಕಾಶ್ (55), ಆತನ ಮಗ ಪ್ರೇಮರಾಜ್ (35) ಹಾಗೂ ದಿನೇಶ್ ಬಾಬುಜಿ (30) ಎಂಬುವರನ್ನು ಬಂಧಿಸಲಾಗಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದ್ದಾರೆ.
'ಆರೋಪಿ ವಿಜಯ್ ಪ್ರಕಾಶ್ ವಿರುದ್ಧ ಹೈದರಾಬಾದ್, ತಿರುಪತಿ ಹಾಗೂ ಕೊಯಮತ್ತೂರಿನ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ' ಎಂದೂ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.