ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸಮತಾ ಸೈನಿಕ ದಳ ನೀಡುವ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಕನ್ನಡ ಪರ ಹೋರಾಟಗಾರರಾಗಿದ್ದ ಜಿ.ನಾರಾಯಣ ಕುಮಾರ್ ಅವರು ಆಯ್ಕೆಯಾಗಿದ್ದಾರೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಆರ್.ಪಿ.ಐ. ಸತೀಶ್, ‘ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾರಾಯಣ ಕುಮಾರ್ ಅವರನ್ನು ಮರಣೋತ್ತರವಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜಯಂತಿ ಹಾಗೂ ಎಂ. ವೆಂಕಟಸ್ವಾಮಿ ಅವರ 71ನೇ ಜನ್ಮದಿನದ ಅಂಗವಾಗಿ ಜೂನ್ 4ರಂದು ಬೆಳಿಗ್ಗೆ 11 ಗಂಟೆಗೆ ಪುರಭವನದಲ್ಲಿ ಪರಿವರ್ತನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದೇ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದರು.
‘ಸಮಾರಂಭದಲ್ಲಿ ಲೇಖಕಿ ಬಾನು ಮುಷ್ತಾಕ್ ಅವರನ್ನು ಗೌರವಿಸಲಾಗುತ್ತದೆ. ಅಂದು ಬೆಳಿಗ್ಗೆ 9.30ಕ್ಕೆ ಕೆ.ಆರ್. ಮಾರುಕಟ್ಟೆಯಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಟೌನ್ ಹಾಲ್ವರೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಸಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.