ADVERTISEMENT

ಮಾದರಿಯಾದ ಹುಸ್ಕೂರು ಗ್ರಾ.ಪಂ.

ಸರ್ಕಾರದಿಂದ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2023, 18:24 IST
Last Updated 3 ಅಕ್ಟೋಬರ್ 2023, 18:24 IST
ಕಾರ್ಯಕ್ರಮದಲ್ಲಿ ರಾಜೇಶ್ ಹೆಚ್.ಆರ್, ಬಿ.ರಮೇಶ್ ಹಾಗೂ ಕೆಂಪಮ್ಮ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ‘ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ’ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ರಾಜೇಶ್ ಹೆಚ್.ಆರ್, ಬಿ.ರಮೇಶ್ ಹಾಗೂ ಕೆಂಪಮ್ಮ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ‘ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ’ ಸ್ವೀಕರಿಸಿದರು.   

ಹೆಸರಘಟ್ಟ: ಗ್ರಾಮಗಳಿಗೆ ಸಮರ್ಪಕ ಕುಡಿಯುವ ನೀರು, ವಿದ್ಯುತ್ ದೀಪಗಳ ಅಳವಡಿಕೆ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ, ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ಗ್ರಾಮ ಪಂಚಾಯಿತಿಗೆ 2022-23ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ’ ಪ್ರದಾನ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ಹಮ್ಮಿಕೊಂಡ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜೇಶ್ ಎಚ್.ಆರ್, ಅಧ್ಯಕ್ಷ ಬಿ.ರಮೇಶ್ ಹಾಗೂ ಉಪಾಧ್ಯಕ್ಷೆ ಕೆಂಪಮ್ಮ ಈ ಪ್ರಶಸ್ತಿ ಸ್ವೀಕರಿಸಿದರು. ಈ ಪ್ರಶಸ್ತಿಯು ಗಾಂಧಿ ಚರಕ, ₹5 ಲಕ್ಷ ನಗದು ಒಳಗೊಂಡಿದೆ.

‘ಮೂರು ವರ್ಷಗಳ ಸತತ ಪರಿಶ್ರಮಕ್ಕೆ ಸಂದ ಪ್ರತಿಫಲವಿದು. ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 20 ಗ್ರಾಮಗಳು ಬರುತ್ತವೆ‌. 22 ಸದಸ್ಯರಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂಬ ಧ್ಯೇಯ ನಮ್ಮದಾಗಿದೆ. ಎಲ್ಲಾ ಸೇವೆಗಳು ಒಂದೇ ಸೂರಿನಡಿ ಸಿಗುವಂತೆ ಮಾಡಲು ಗ್ರಾಮ ಪಂಚಾಯಿತಿ ಆವರಣದಲ್ಲಿಯೇ ವ್ಯವಸ್ಥೆ ಮಾಡುತ್ತಿದ್ದೇವೆ. ಗ್ರಂಥಾಲಯ, ಅಂಚೆ ಕಚೇರಿ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿ ಕಚೇರಿ, ಸ್ತ್ರೀಶಕ್ತಿ ಭವನ, ಸಾಮಾನ್ಯ ಸೇವೆಗಳ ಕಚೇರಿಗಳನ್ನು ತೆರೆಯುವ ಚಿಂತನೆಯನ್ನು ಹೊಂದಿದ್ದೇವೆ’ ಎಂದು ರಾಜೇಶ್ ಎಚ್‌.ಆರ್. ತಿಳಿಸಿದರು. 

ADVERTISEMENT

ಬಿ.ರಮೇಶ್, ‘ಪಂಚಾಯಿತಿಗೆ ಪ್ರಶಸ್ತಿ ಬಂದಿರುವುದು ಅತ್ಯಂತ ಖುಷಿಯ ವಿಚಾರ. ಎಲ್ಲಾ ಸದಸ್ಯರ ಸಹಕಾರದಿಂದ ಪ್ರಗತಿಪರ ಕೆಲಸ ಮಾಡಲು ಸಾಧ್ಯವಾಯಿತು. ಪ್ರಶಸ್ತಿಯು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಜನರ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ’ ಎಂದು ಸಂತಸ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.