ಬೆಂಗಳೂರು: ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕೆಂಪೇಗೌಡನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಕೋಲಾರದ ವೆಂಕಟರಮಣ ಅಲಿಯಾಸ್ ರಾಮಾಂಜುಲು (38) ಹಾಗೂ ಮುನೀರ್ ಖಾನ್ ಅಲಿಯಾಸ್ ಲಂಗ್ಡಾ ಐಸೋಮತ್ (38) ಬಂಧಿತರು. ಅವರಿಂದ 104 ಕೆ.ಜಿ ಗಾಂಜಾ ಹಾಗೂ ಆಟೊ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಗುರುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಆರೋಪಿಗಳು, ಆಟೊದಲ್ಲಿ ಗಾಂಜಾ ಪೊಟ್ಟಣಗಳನ್ನು ಇಟ್ಟುಕೊಂಡು ಬಂಡೆಕಾಳಮ್ಮ ದೇವಸ್ಥಾನ ಬಳಿ ಹೊರಟಿದ್ದರು. ಆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆಟೊವನ್ನು ತಡೆದು ಪರಿಶೀಲನೆ ನಡೆಸಲಾಯಿತು. ಗಾಂಜಾ ಪೊಟ್ಟಣ ಸಮೇತ ಆರೋಪಿಗಳು ಸಿಕ್ಕಿಬಿದ್ದರು’ ಎಂದೂ ತಿಳಿಸಿದರು.
‘ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಗಾಂಜಾ ತಂದಿದ್ದ ಆರೋಪಿಗಳು, ಅದನ್ನು ತಮ್ಮ ಮನೆಗೆ ತೆಗೆದುಕೊಂಡು ಹೊರಟಿದ್ದರು. ಮನೆಯಲ್ಲಿ ಗಾಂಜಾ ಸಂಗ್ರಹಿಸಿ, ಗ್ರಾಹಕರಿಗೆ ಮಾರಾಟ ಮಾಡುವುದು ಅವರ ಉದ್ದೇಶವಾಗಿತ್ತು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಕೆಲ ಕೂಲಿ ಕಾರ್ಮಿಕರು ಆರೋಪಿಗಳ ಬಳಿ ಗಾಂಜಾ ಖರೀದಿ ಮಾಡುತ್ತಿದ್ದರು’ ಎಂದೂ ಹೇಳಿದರು.
‘ಆರೋಪಿಗಳ ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಅನುಮಾನವಿದೆ. ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ’ ಎಂದೂ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.