ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ 18ನೇ ಆರೋಪಿ ರಿಷಿಕೇಶ್ ದೇವಾಡಿಕರ್ನನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಗೌರಿ ಹತ್ಯೆ ಬಳಿಕ, ಒಂದೂವರೆ ವರ್ಷದಿಂದ ಪೊಲೀಸರಿಗೆ ಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ. ಈತನನ್ನು ಎಸ್ಐಟಿ ಅಧಿಕಾರಿಗಳು ಜಾರ್ಖಂಡ್ನ ಧನಾಬಾಗ್ ಜಿಲ್ಲೆಯ ಕತ್ರಾಸ್ನಿಂದ ಬಂಧಿಸಿ, ನಗರಕ್ಕೆ ಕರೆದುಕೊಂಡು ಬಂದಿದ್ದರು.
ಮಹಾರಾಷ್ಟ್ರದ ಔರಂಗಾಬಾದ್ ನಿವಾಸಿಯಾದ ರಿಶಿಕೇಷ್ ಗೌರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಮಹಾರಾಷ್ಟ್ರದವನೇ ಆದ ಅಮೋಲ್ ಕಾಳೆ ಮತ್ತಿತರ ಒಡನಾಟದಲ್ಲಿದ್ದ. ಗೌರಿ ಲಂಕೇಶ್ ಹತ್ಯೆ ಬಳಿಕ ಹತ್ಯೆಗೆ ಬಳಸಿದ ಗನ್ ನಾಶ ಮಾಡುವುದರಲ್ಲಿಯೂ ಈತ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗುತ್ತಿದೆ.
ಈ ಬಗ್ಗೆ ಸ್ಥಳ ಮಹಜರು ನಡೆಸಲು ಮತ್ತು ಈತನ ಮನೆ ಪರಿಶೀಲನೆ ನಡೆಸುವ ಉದ್ದೇಶದಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಎಸ್ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ ಎಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.